ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸಲು ಕರ್ನಾಟಕ ಸರ್ಕಾರದಿಂದ ಮಹತ್ವದ ನಿರ್ಧಾರ!
ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ.

ದೇಶಾದ್ಯಂತ ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ. ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ರಾಜ್ಯಗಳ ಮಟ್ಟದಲ್ಲಿ ಸದ್ಯ ದೆಹಲಿ ಸರ್ಕಾರವು ತನ್ನದೆ ಎಲೆಕ್ಟ್ರಿಕ್ ವಾಹನ ನೀತಿಯೊಂದಿಗೆ ಮುಂಚೂಣಿ ಸಾಧಿಸುತ್ತಿದ್ದು, ದೆಹಲಿ ನಂತರ ಇತರೆ ರಾಜ್ಯಗಳಲ್ಲೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿದಾರರನ್ನು ಉತ್ತೇಜಿಸಲು ಗರಿಷ್ಠ ಸಬ್ಸಡಿ ಮತ್ತು ನೋಂದಣಿ ಶುಲ್ಕವನ್ನು ಮನ್ನಾದಂತಹ ಯೋಜನೆಗಳನ್ನು ಪ್ರಕಟಿಸುತ್ತಿವೆ.

ಇದೀಗ ಕರ್ನಾಟಕ ಸರ್ಕಾರವು ಸಹ ಹೆಚ್ಚುತ್ತಿರುವ ಇಂಧನ ಬೆಲೆಗಳ ನಿಯಂತ್ರಣ ಮತ್ತು ಮಾಲಿನ್ಯ ತಡೆ ಉದ್ದೇಶದೊಂದಿಗೆ ಸರ್ಕಾರಿ ಸ್ವಾಮ್ಯದಲ್ಲಿನ ಇಂಧನ ವಾಹನಗಳ ಬಳಕೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಶೇ.50ಕ್ಕೆ ಹೆಚ್ಚಿಸುವ ಯೋಜನೆ ಹೊಂದಿರುವುದಾಗಿ ಸ್ಪಷ್ಟಪಡಿಸಿದೆ.

ಸರ್ಕಾರಿ ಸ್ವಾಮ್ಯದಲ್ಲಿರುವ ಇಂಧನ ಚಾಲಿತ ವಾಹನಗಳನ್ನು ಹಂತ-ಹಂತವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಗಮನಹರಿಸುತ್ತಿರುವುದಾಗಿ ಹೇಳಿಕೊಂಡಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ ಅವರು ಮುಂದಿನ ಮೂರು ವರ್ಷಗಳಲ್ಲಿ ಶೇ. 50 ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಪೂರಕವಾದ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.

ಹಾರ್ವರ್ಡ್ ಇಂಡಿಯಾ ವರ್ಚುವಲ್ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿ ಮಾತನಾಡಿದ ಅಶ್ವಥ್ ನಾರಾಯಣ ಅವರು 'ಭವಿಷ್ಯದತ್ತ ಸುಸ್ಥಿರ ಸಾರಿಗೆ' ಕುರಿತು ಮಾತನಾಡಿ ಮಾಲಿನ್ಯ ತಡೆಯುವತ್ತ ರಾಜ್ಯ ಸರ್ಕಾರವು ಸೂಕ್ತ ಯೋಜನೆಗಳನ್ನು ಜಾರಿಗೆ ತರಲು ಬದ್ದವಾಗಿದೆ ಎಂದರು.

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ನಗರದ ಪ್ರಮುಖ ಕಡೆಗಳಲ್ಲಿ ಅಗತ್ಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಸರ್ಕಾರ ಸಿದ್ದವಾಗಿದೆ ಎಂದಿರುವ ಉಪಮುಖ್ಯಮಂತ್ರಿಯವರು, ಮೆಟ್ರೋ ನಿಲ್ದಾಣಗಳು, ಶಾಪಿಂಗ್ ಮಾಲ್ಗಳು, ಐಟಿ ಉದ್ಯಾನವನಗಳು ಮತ್ತು ಅಪಾರ್ಟ್ಮೆಂಟ್ಗಳಲ್ಲಿ ಹೆಚ್ಚಿನ ಮಟ್ಟದ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಎಲೆಕ್ಟ್ರಿಕ್ ವಾಹನಗಳ ಬಳಕೆಯೊಂದಿಗೆ ನಗರದಲ್ಲಿ ಹೆಚ್ಚಿರುವ ಮಾಲಿನ್ಯ ತಡೆಯುವುದರ ಜೊತೆಗೆ ಇಂಧನ ವೆಚ್ಚಗಳನ್ನು ಗಣನೀಯವಾಗಿ ಇಳಿಕೆ ಮಾಡಬಹುದಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೊಸ ಯೋಜನೆಗಾಗಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸುಳಿವು ನೀಡಿದ್ದಾರೆ.

ಇನ್ನು ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.
MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯು ಸನ್ ಮೊಬಿಲಿಟಿ ಜೊತೆಗೂಡಿ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.


Click it and Unblock the Notifications