ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ನೋಂದಣಿ ನಿಲ್ಲಿಸುವುದಿಲ್ಲವೆಂದು ಸ್ಪಷ್ಟನೆ ನೀಡಿದ ಸಾರಿಗೆ ಸಚಿವ
ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗಲು ಸರ್ಕಾರವು ಜನರನ್ನು ಉತ್ತೇಜಿಸುತ್ತಿದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಪರ್ಯಾಯ ಇಂಧನಗಳಾದ ಎಥೆನಾಲ್, ಬಯೋ - ಎಲ್ಎನ್ಜಿ ಹಾಗೂ ಹಸಿರು ಹೈಡ್ರೋಜನ್ ವಾಹನಗಳ ಬಳಕೆಯನ್ನು ಸಹ ಸರ್ಕಾರವು ಉತ್ತೇಜಿಸುತ್ತದೆ ಎಂದು ಅವರು ಹೇಳಿದ್ದಾರೆ.

ಆದರೆ ಈ ಕಾರಣಕ್ಕೆ ಐಸಿಇ (ಇಂಟರ್ನಲ್ ಕಂಬಸ್ಜನ್ ಎಂಜಿನ್) ವಾಹನಗಳ ನೋಂದಣಿಯನ್ನು ನಿಲ್ಲಿಸುವುದಿಲ್ಲವೆಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ (ಐಸಿಸಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರು ವಾಯುಯಾನ ಇಂಧನದಲ್ಲಿ 50% ನಷ್ಟು ಎಥೆನಾಲ್ ಅನ್ನು ಬಳಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಜನರಿಂದ ಉತ್ತಮ ಸ್ವಾಗತ ಸಿಗುತ್ತಿರುವುದರಿಂದ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚುತ್ತಿದೆ ಎಂದು ಅವರು ಹೇಳಿದರು. 250 ಕ್ಕೂ ಹೆಚ್ಚು ಸ್ಟಾರ್ಟ್ಅಪ್ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇದರಿಂದ ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಯಾಗಲಿದೆ ಎಂಬುದು ವಾಹನ ಸವಾರರಿಗೆ ಸಂತಸದ ಸುದ್ದಿ.

ಈಗ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿರುವುದರಿಂದ ಅನೇಕ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಹಾಗೆಯೇ ಪರಿಸರ ಕಾರ್ಯಕರ್ತರು ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಮುಂದಾಗುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲವೆಂಬುದು ಇದರ ಹಿಂದಿರುವ ಪ್ರಮುಖ ಕಾರಣ.

ಆದರೆ ಎಲೆಕ್ಟ್ರಿಕ್ ವಾಹನಗಳ ಬೆಲೆ ಹೆಚ್ಚಿರುವುದರಿಂದ ಜನ ಸಾಮಾನ್ಯರು ಅವುಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾದರೆ ಸಹಜವಾಗಿಯೇ ಹೆಚ್ಚು ಹೆಚ್ಚು ಜನರು ಅವುಗಳನ್ನು ಬಳಸುತ್ತಾರೆ. ಇದರಿಂದ ಭಾರತದಲ್ಲಿ ವಾಯು ಮಾಲಿನ್ಯ ಸಮಸ್ಯೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಕಚ್ಚಾ ತೈಲ ಆಮದು ಪ್ರಮಾಣವು ಕೂಡ ಕಡಿಮೆಯಾಗುತ್ತದೆ.

ಇನ್ನು ದೇಶದ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ಸಂಚಾರವನ್ನು ನಿಷೇಧಿಸುವಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೆಹಲಿಯಲ್ಲಿ 10 ವರ್ಷ ಹಳೆಯ ಡೀಸೆಲ್ ಹಾಗೂ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ವಾಹನಗಳು ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವಂತಿಲ್ಲ.

ಈ ನಿಯಮ ಉಲ್ಲಂಘಿಸುವ ವಾಹನಗಳ ಜಪ್ತಿ ಮಾಡುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು. ಇದರಿಂದ ಹಳೆ ವಾಹನ ಮಾಲೀಕರಿಗೆ ವಿವಿಧ ಸಮಸ್ಯೆಗಳಾಗುತ್ತಿವೆ. ಈ ನಿಯಮದಿಂದಾಗಿ ಸಾವಿರಾರು ವಾಹನಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿ ರಾಜ್ಯ ಸರ್ಕಾರವು ಹೊಸ ನಿಯಮವನ್ನು ಜಾರಿಗೆ ತಂದಿದೆ. ಇದರಿಂದ ಹಳೆ ವಾಹನ ಮಾಲೀಕರಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ.

ಹೊಸ ನಿಯಮಗಳ ಪ್ರಕಾರ, 10 ವರ್ಷ ಹಳೆಯ ಡೀಸೆಲ್ ವಾಹನಗಳು ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಬಹುದು. ಆದರೆ ಇದಕ್ಕೆ ಒಂದು ಷರತ್ತು ವಿಧಿಸಲಾಗಿದೆ. 10 ವರ್ಷ ಮೇಲ್ಪಟ್ಟ ಡೀಸೆಲ್ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಿದರೆ, ಆ ವಾಹನಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಬಹುದು.

ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ನಿರ್ಧಾರವು ಹಳೆಯ ಡೀಸೆಲ್ ವಾಹನಗಳ ಮಾಲೀಕರಿಗೆ ತಮ್ಮ ವಾಹನಗಳ ಬಳಕೆಯನ್ನು ಮುಂದುವರಿಸಲು ಸಹಾಯ ಮಾಡುತ್ತದೆ. ಈ ಕ್ರಮವು ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆಯನ್ನು ಉತ್ತೇಜಿಸಲು ನೆರವು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಈ ನಿಯಮವು 15 ವರ್ಷ ಹಳೆಯ ಪೆಟ್ರೋಲ್ ವಾಹನಗಳಿಗೆ ಅನ್ವಯಿಸುತ್ತದೆಯೇ ಎಂಬುದು ಖಚಿತವಾಗಿಲ್ಲ.

ಈ ಆದೇಶಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ದೆಹಲಿ ಸರ್ಕಾರದ ಈ ಕ್ರಮವನ್ನು ಬಹುತೇಕ ಎಲ್ಲರೂ ಸ್ವಾಗತಿಸಿದ್ದಾರೆ. ಆದರೆ ಯೋಜನೆಯಲ್ಲಿರುವ ಗೊಂದಲವನ್ನು ದೆಹಲಿ ರಾಜ್ಯ ಸರ್ಕಾರವು ಪರಿಹರಿಸಬೇಕೆಂಬುದು ಎಲ್ಲರ ಆಗ್ರಹವಾಗಿದೆ. ದೆಹಲಿ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಗಂಭೀರ ಪ್ರಯತ್ನಗಳನ್ನು ಮಾಡುತ್ತಿದೆ.

ಇದರ ಜೊತೆಗೆ ದೆಹಲಿ ಸರ್ಕಾರವು ವಾಯು ಮಾಲಿನ್ಯದ ವಿರುದ್ಧ ಸಮರ ಸಾರಿದ್ದು, ದೆಹಲಿ ನಗರದೊಳಗೆ ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ಬಳಸಬೇಕು ಎಂದು ಸೂಚಿಸಿದೆ. ನಗರದ 250 ಪ್ರಮುಖ ರಸ್ತೆಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 11ರವರೆಗೆ ಹಾಗೂ ಸಂಜೆ 5ರಿಂದ ರಾತ್ರಿ 9ರವರೆಗೆ ವಾಣಿಜ್ಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ವಾಯು ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇದನ್ನು ಉಲ್ಲಂಘಿಸುವ ವಾಹನಗಳಿಗೆ ಭಾರಿ ದಂಡ ವಿಧಿಸಲಾಗುವುದು ಎಂದು ವರದಿಯಾಗಿದೆ. ಈ ಅವಧಿಯಲ್ಲಿ ಮೇಲ್ಕಂಡ ನಿಷೇಧವು ಕೆಲವು ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ವಾಯು ಮಾಲಿನ್ಯ ಸಮಸ್ಯೆಯನ್ನು ನಿಯಂತ್ರಿಸುವುದು ಇದರ ಹಿಂದಿರುವ ಪ್ರಮುಖ ಉದ್ದೇಶವಾಗಿದೆ.

ಯಾವುದೇ ರೀತಿಯಲ್ಲಿ ಪರಿಸರ ಮಾಲಿನ್ಯವನ್ನುಂಟು ಮಾಡದ ಎಲೆಕ್ಟ್ರಿಕ್ ವಾಹನಗಳಿಗೆ ಈ ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ದೆಹಲಿ ರಾಜ್ಯ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಈ ಘೋಷಣೆ ಮಾಡಿದ್ದಾರೆ. ನೋ ಎಂಟ್ರಿ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳು ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.


Click it and Unblock the Notifications