Bengaluru Tumakuru Flyover: ಬೆಂಗಳೂರು - ತುಮಕೂರು ಮೇಲ್ಸೇತುವೆ ಶೀಘ್ರ ಬಸ್ ಸಂಚಾರಕ್ಕೆ ಮುಕ್ತ?
ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು - ತುಮಕೂರು ಮೇಲ್ಸೇತುವೆ (Bengaluru - Tumakuru Flyover) ಕುರಿತು ಮಹತ್ವದ ಮಾಹಿತಿ ಲಭ್ಯವಾಗಿದೆ. ಫ್ಲೈಓವರ್ಗೆ ಕೇಬಲ್ ಅಳವಡಿಕೆ ಕಾರ್ಯ ಬಹುತೇಕ ಮುಗಿದಿದ್ದು, ಹೊಸ ವರ್ಷದ (2024) ವೇಳೆಗೆ ಬಸ್ ಸೇರಿದಂತೆ ಭಾರೀ ವಾಹನ ಸಂಚಾರಕ್ಕೆ ಮುಕ್ತವಾಗಬಹುದು.
ಈಗಾಗಲೇ, ಒಟ್ಟು 120 ಪಿಲ್ಲರ್ಗಳಿಗೆ ಕೇಬಲ್ ಅಳವಡಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಶೇಕಡ 70% ಕಾಮಗಾರಿ ಮುಕ್ತಾಯಗೊಂಡಿದೆ. ಜನವರಿಯಿಂದ ಬಸ್ ಸೇರಿದಂತೆ ಭಾರೀ ವಾಹನಗಳ ಓಡಾಡಕ್ಕೆ ಅನುವು ಮಾಡಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ನಿರ್ಧಾರ ಮಾಡಿದೆ ಎಂದು ವರದಿಯಾಗಿದೆ. ಇದರೊಟ್ಟಿಗೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಕೂಡ ಲೋಡ್ ಟೆಸ್ಟಿಂಗ್ ಮಾಡಲಿದೆ ಎಂದು ಹೇಳಲಾಗಿದೆ.

ಎಲ್ಲವೂ, ಅಂದುಕೊಂಡಂತೆ ನಡೆದರೆ, ಇನ್ನೂ ಕೆಲವೇ ದಿನಗಳಲ್ಲಿ ಎರಡು ವರ್ಷಗಳಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಯಲಿದೆ. 2021ರ ಡಿಸೆಂಬರ್ ತಿಂಗಳಲ್ಲಿ 8ನೇ ಮೈಲಿ ಸಮೀಪ ಈ ಮೇಲ್ಸೇತುವೆಯ ಪ್ಲಿಲರ್ 102 ಮತ್ತು 103ರ ನಡುವೆ ಬಿರುಕು ಕಂಡುಬಂದಿತ್ತು. ಆ ಕಾರಣಕ್ಕೆ, ಇಲ್ಲಿ ಎಲ್ಲ ವಿಧದ ವಾಹನ ಓಡಾಟವನ್ನು ನಿರ್ಬಂಧಿಸಲಾಯಿತ್ತು.
ಆದರೆ, ಕೆಲವು ತಿಂಗಳ ಬಳಿಕ, ದ್ವಿಚಕ್ರ ವಾಹನ, ಕಾರು ಒಳಗೊಂಡಂತೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಯಿತು. ಬಸ್ ಸೇರಿದಂತೆ ಭಾರೀ ವಾಹನಗಳಿಗೆ ನಿರ್ಬಂಧವನ್ನು ಹಾಗೆಯೇ ಮುಂದುವರಿಸಲಾಯಿತು. ಇದರಿಂದ ವಾರಾಂತ್ಯದ ದಿನ ಹಾಗೂ ಹಬ್ಬಗಳ ಋತುವಿನಲ್ಲಿ ಮೇಲ್ಸೇತುವೆ ಕೆಳಗೆ, ಗಂಟೆಗಟ್ಟಲೇ ಟ್ರಾಫಿಕ್ ನಲ್ಲಿ ಸಿಲುಕಿಕೊಂಡು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾಲ್ಕು ಕಿಲೋಮೀಟರ್ ಉದ್ದದ ಬೆಂಗಳೂರು ತುಮಕೂರು ಮೇಲ್ಸೇತುವೆಯಲ್ಲಿ ಕೇಬಲ್ ಅಳವಡಿಕೆ ಬಳಿಕ, ಬಸ್ ಸೇರಿದಂತೆ ಭಾರೀ ಗಾತ್ರದ ವಾಹನ ಸಂಚಾರಕ್ಕೆ ಅವಕಾಶ ನೀಡುವುದರಿಂದ ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಹಾವೇರಿ, ಮಂಗಳೂರು, ಶಿವಮೊಗ್ಗ ಸೇರಿದಂತೆ ಅರ್ಧ ಕರ್ನಾಟಕದ 14 ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಈ ಕಾಮಗಾರಿ ಮುಗಿಯವರೆಗೂ ರೂ.30 ಕೋಟಿ ವೆಚ್ಚವಾಗಬಹುದು ಎನ್ನಲಾಗಿದೆ.
ತುಮಕೂರು - ಬೆಂಗಳೂರು ಮಧ್ಯೆ ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರದ ಅಭಿವೃದ್ಧಿಗೆ ಭಾರತಮಾಲಾ ಯೋಜನೆಯಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರೂ.844 ಕೋಟಿ ವೆಚ್ಚದಲ್ಲಿ ನೆಲಮಂಗಲ - ತುಮಕೂರು ನಡುವೆ 44.04 ಕಿಲೋಮೀಟರ್ ಉದ್ದದ ದಶಪಥ ಹೆದ್ದಾರಿ ನಿರ್ಮಾಣ ಕಾರ್ಯದಲ್ಲಿ ತೊಡಗಿದೆ. ಆದರೆ, ಈ ಕಾಮಗಾರಿಯೂ ಕುಂಟುತ್ತಾ ಸಾಗಿದ್ದು, 2025ರ ಆಗಸ್ಟ್ ತಿಂಗಳ ಕೊನೆಯಲ್ಲಿ ಈ ರಸ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ.
ಇನ್ನು, ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದ್ದು, 190 ಕಿಮೀ ಉದ್ದದ ಸುರಂಗ ರಸ್ತೆ ಕಾಮಗಾರಿಯನ್ನು ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಿದೆ. ಈ ಯೋಜನೆಗೆ 45 ದಿನಗಳೊಳಗೆ ಟೆಂಡರ್ ಆಹ್ವಾನಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.
ಬೆಂಗಳೂರು ನಗರದಲ್ಲಿ ಅತಿಹೆಚ್ಚು ಟ್ರಾಫಿಕ್ ಸಮಸ್ಯೆ ಉಂಟಾಗುವ ಪ್ರದೇಶದಲ್ಲಿ ಮೊದಲ ಆದ್ಯತೆಯಾಗಿ ಸುರಂಗ ರಸ್ತೆ ನಿರ್ಮಾಣ ಮಾಡಲು ಸರ್ಕಾರ ತೀರ್ಮಾನಿಸಿದೆ. ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ, ಮಿಲ್ಲರ್ ಸರ್ಕಲ್, ಚಾಲುಕ್ಯ ಸರ್ಕಲ್, ಟ್ರಿನಿಟಿ ಸರ್ಕಲ್, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ಮೈಸೂರು ರಸ್ತೆಯಿಂದ ಶಿರಸಿ ವೃತ್ತ , ಮಾಗಡಿ ರಸ್ತೆ, ತುಮಕೂರು ರಸ್ತೆಯಿಂದ ಯಶವಂತಪುರ ಜಂಕ್ಷನ್ ಸಮೀಪ ಈ ರಸ್ತೆ ನಿರ್ಮಾಣವಾಗಲಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications