ಈ ಅವಧಿಗೆ ಎಕ್ಸ್ಪ್ರೆಸ್ವೇ ರೆಡಿ: ಬೆಂಗಳೂರಿನಲ್ಲಿ ಕಾಫಿ ಕುಡಿದ್ರೆ, ಚೆನ್ನೈನಲ್ಲಿ ಪೊಂಗಲ್ ಸವಿಯಬಹುದು!
ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳನ್ನು ಬೆಸೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಯನ್ನು ಅಭಿವೃದ್ಧಿಪಡಿಸುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಇದೇ ವರ್ಷದ ಆಗಸ್ಟ್ ತಿಂಗಳಲ್ಲಿ ನೂತನ ಹೆದ್ದಾರಿಯನ್ನು ಉದ್ಘಾಟನೆ ಮಾಡಬೇಕಾಗಿತ್ತು. ಆದರೆ, ಕೆಲವೆಡೆಗಳಲ್ಲಿ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿದ್ದು, ಹೊಸ ಎಕ್ಸ್ಪ್ರೆಸ್ವೇ 1 ವರ್ಷ ತಡವಾಗಿ, ಅಂದರೆ 2026ರ ಜೂನ್ನಲ್ಲಿ ಸಂಪೂರ್ಣವಾಗಿ ವಾಹನ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ.
ಈ ಬಗ್ಗೆ ರಾಜ್ಯಸಭಾ ಸಂಸದ ಲಹರ್ ಸಿಂಗ್ ಸಿರೋಯಾ ಕೇಳಿದ ಪ್ರಶ್ನೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಉತ್ತರಿಸಿದರು. '2026ರ ಮಧ್ಯ ಭಾಗದಲ್ಲಿ ನೂತನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇನ ಎಲ್ಲ ಕಾಮಗಾರಿಯನ್ನು ಮಾಡಿ ಮುಗಿಸಲು ತೀರ್ಮಾನಿಸಲಾಗಿದೆ' ಎಂದು ಅವರು ಹೇಳಿದ್ದಾರೆ.

ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ (Bengaluru-Chennai Expressway) 262 ಕಿ.ಮೀ ಉದ್ದವಿದೆ. ಕರ್ನಾಟಕದಲ್ಲಿ 71 ಕಿ.ಮೀ ಹಾದು ಹೋಗುತ್ತದೆ. ಉಳಿದ ಭಾಗದ ರಸ್ತೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುತ್ತದೆ. ಈಗಾಗಲೇ ರಾಜ್ಯದ ಹೊಸಕೋಟೆ & ಕೆಜಿಎಫ್ ನಡುವಿನ 68 ಕಿ.ಮೀ ಮಾರ್ಗವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಆದರೆ, ಅಧಿಕೃತ ಲೋಕಾರ್ಪಣೆಗೊಂಡಿಲ್ಲ. ಉಳಿದ 3 ಕಿ.ಮೀ ಕಾಮಗಾರಿ ವರ್ಷಾಂತ್ಯದೊಳಗೆ ಮುಗಿಯಬಹುದು ಎಂದು ಅಂದಾಜಿಸಲಾಗಿದೆ.
ಈ ಹೆದ್ದಾರಿ ದಕ್ಷಿಣ ಭಾರತದ ಮೊದಲ ಗ್ರೀನ್ಫೀಲ್ಡ್ ಎಕ್ಸ್ಪ್ರೆಸ್ವೇ ಆಗಿದ್ದು, ರೂ.17,900 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸದ್ಯ ಬೆಂಗಳೂರು ಹಾಗೂ ಚೆನ್ನೈ ನಡುವೆ ಪ್ರಯಾಣಿಸಲು 7 ಗಂಟೆ ಬೇಕಾಗುತ್ತದೆ. ಅದು ನೂತನ ಎಕ್ಸ್ಪ್ರೆಸ್ವೇಯಿಂದ 3 ಗಂಟೆಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಬಹುನಿರೀಕ್ಷಿತ ಈ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ಆಂಧ್ರದ ಚಿತ್ತೂರು, ತಮಿಳುನಾಡು ರಾಜ್ಯದ ರಾಣಿಪೇಟೆ ಹಾಗೂ ಶ್ರೀಪೆರಂಬದೂರುಗಳಿಗೆ ಸಂಪರ್ಕ ಕೊಂಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಈ ಎಕ್ಸ್ಪ್ರೆಸ್ವೇಯನ್ನು 4 ಲೈನ್ಗಳಲ್ಲಿ ನಿರ್ಮಿಸುತ್ತಿದೆ. ಒಂದೊಮ್ಮೆ ಸಂಚಾರ ದಟ್ಟಣೆ ಹೆಚ್ಚಾದರೆ, 8 ಲೈನ್ಗಳಿಗೂ ವಿಸ್ತರಣೆ ಮಾಡಬಹುದು. ವಿಶೇಷವಾಗಿ ನೂತನ ಹೆದ್ದಾರಿ 17 ಮೇಲ್ಸೇತುವೆಗಳು ಹಾಗೂ 41 ಕೆಳ ಸೇತುವೆಗಳನ್ನು ಒಳಗೊಂಡಿದೆ.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಸೇರಿದ ಕರ್ನಾಟಕ ವ್ಯಾಪ್ತಿಯಲ್ಲಿ ಪ್ರತಿದಿನ 1,600 ರಿಂದ 2,000 ವಾಹನಗಳು ಸಂಚಾರ ನಡೆಸುತ್ತಿವೆ. ಈಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿ, ನಾಲ್ವರು ಸಾವನ್ನಪ್ಪಿದ್ದರು. ಆ ಬಳಿಕ ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.
ಒಟ್ಟಾರೆಯಾಗಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ನಿರ್ಮಾಣದಿಂದ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ನಿರ್ದಿಷ್ಟ ಗಮ್ಯ ಸ್ಥಾನವನ್ನು ಆದಷ್ಟು ಬೇಗ ತಲುಪಲು ಸಾಧ್ಯವಾಗಲಿದೆ. ಇದು ಮಾತ್ರವಲ್ಲದೆ, ಶೈಕ್ಷಣಿಕ, ಪ್ರವಾಸೋದ್ಯಮ ಹಾಗೂ ವ್ಯಾಪಾರ ವಾಹಿವಾಟುಗಳು ಕೂಡ ದೊಡ್ಡ ಮಟ್ಟದಲ್ಲಿ ವೃದ್ಧಿಯಾಗಲಿದ್ದು, ರಿಯಲ್ ಎಸ್ಟೇಟ್ ಉದ್ಯಮವು ವ್ಯಾಪಕವಾಗಿ ಬೆಳವಣಿಗೆಯೊಂದಲು ಎಲ್ಲ ರೀತಿಯ ಅವಕಾಶವಿರುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








