Expressway: ಬೆಂಗಳೂರು - ಚೆನ್ನೈ ಎಕ್ಸ್ಪ್ರೆಸ್ವೇ.. ಕರ್ನಾಟಕದಲ್ಲಿ ವಾಹನಗಳ ಸಂಚಾರ ಶುರು.. ಎಲ್ಲಿಂದ, ಎಲ್ಲಿಗೆ?
ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳಿಗೆ ಸಂಪರ್ಕ ಕಲ್ಪಿಸಲು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಬೆಂಗಳೂರು - ಚೆನ್ನೈ ಎಕ್ಸ್ಪ್ರೆಸ್ವೇಯನ್ನು ಅಭಿವೃದ್ಧಿಪಡಿಸುತ್ತಿದೆ. ಸದ್ಯ, ಕರ್ನಾಟಕ ವ್ಯಾಪ್ತಿಯ ಈ ಹೆದ್ದಾರಿಯನ್ನು ಅನಧಿಕೃತವಾಗಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಪ್ರತಿದಿನ 1,600 ರಿಂದ 2,000 ವಾಹನಗಳು ಓಡಾಟ ನಡೆಸುತ್ತಿವೆ. ರಾಜ್ಯದಲ್ಲಿ ನೂತನ ಎಕ್ಸ್ಪ್ರೆಸ್ವೇ 71 ಕಿಲೋಮೀಟರ್ ಹಾದುಹೋಗುತ್ತದೆ. ಅದರಲ್ಲಿ ಹೊಸಕೋಟೆ ಹಾಗೂ ಕೆಜಿಎಫ್ (ಬೇತಮಂಗಲ) ನಡುವಿನ 68 ಕಿಲೋಮೀಟರ್ ಉದ್ದದ ರಸ್ತೆಯನ್ನು ವಾಹನ ಸವಾರರು ಬಳಕೆ ಮಾಡುತ್ತಿದ್ದಾರೆ. ಉಳಿದ 3 ಕಿಲೋಮೀಟರ್ ಹೆದ್ದಾರಿಯ ಕಾಮಗಾರಿ ವರ್ಷಾಂತ್ಯದೊಳಗೆ ಮುಗಿಯುವ ನಿರೀಕ್ಷೆಯಿದೆ.
ಈ ಬಗ್ಗೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಎನ್ಎಚ್ಎಐ ಅಧಿಕಾರಿಯೊಬ್ಬರು, 'ವಾಹನ ಸವಾರರು ಹೊಸಕೋಟೆ & ಬೇತಮಂಗಲದವರೆಗೆ ಎಕ್ಸ್ಪ್ರೆಸ್ವೇಯನ್ನು ಉಪಯೋಗಿಸುತ್ತಿದ್ದಾರೆ. ನಾವು ಸುರಕ್ಷತಾ ಕ್ರಮಗಳನ್ನು ಕೂಡ ಕೈಗೊಂಡಿದ್ದೇವೆ. ಈ ರಸ್ತೆಯನ್ನು ಎಲ್ಲ ವಿಧದ ವಾಹನಗಳು ಬಳಕೆ ಮಾಡುತ್ತಿದ್ದು, ಟೋಲ್ ಶುಲ್ಕ ಸಂಗ್ರಹಕ್ಕಾಗಿ ನೋಟಿಫಿಕೇಶನ್ ಹೊರಡಿಸುವವರೆಗೂ ಯಾವುದೇ ವಾಹನಗಳ ಸಂಚಾರವನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ಟೋಲ್ ವಿಧಿಸುವ ಸಂಬಂಧ ಮುಖ್ಯ ಕಚೇರಿಗೆ ಪತ್ರ ಬರೆಯಲಾಗಿದ್ದು, ಅಲ್ಲಿನ ಆದೇಶಕ್ಕೆ ಕಾಯುತ್ತಿದ್ದೇವೆ' ಎಂದಿದ್ದಾರೆ.

ಬೆಂಗಳೂರು - ಚೆನ್ನೈ ಎಕ್ಸ್ಪ್ರೆಸ್ವೇ (Bengaluru - Chennai Expressway) ಹಾದು ಹೋಗುವ ಕರ್ನಾಟಕ ವ್ಯಾಪ್ತಿಯಲ್ಲಿ 2 ಟೋಲ್ ಪ್ಲಾಜಾಗಳು ಕಾರ್ಯ ನಿರ್ವಹಿಸುವ ನಿರೀಕ್ಷೆಯಿದೆ. ಈ ಹೆದ್ದಾರಿಯು ಸಂಪೂರ್ಣವಾಗಿ ಲೋಕಾರ್ಪಣೆಗೊಂಡ ನಂತರ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ವೇ ಮಾದರಿಯಲ್ಲಿ ಇಲ್ಲಿಯೂ ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾಗಳ ಸಂಚಾರವನ್ನು ನಿರ್ಬಂಧಿಸುವ ಸಾಧ್ಯತೆಯಿದೆ.
ನೂತನ ಬೆಂಗಳೂರು - ಚೆನ್ನೈ ಎಕ್ಸ್ಪ್ರೆಸ್ವೇ ವಿಶೇಷತೆಗಳೇನು: ಈ ಹೆದ್ದಾರಿ 262 ಕಿಲೋಮೀಟರ್ ಉದ್ದವಿದೆ. ಕರ್ನಾಟಕದಲ್ಲಿ ಬಹುತೇಕ ಎಲ್ಲ ಕಾಮಗಾರಿ ಮುಕ್ತಾಯಗೊಂಡಿದೆ. ಅದರ ಹೊರತಾಗಿ ಆಂಧ್ರ ಪ್ರದೇಶ ಹಾಗೂ ತಮಿಳುನಾಡುಗಳಲ್ಲಿ ಹೆಚ್ಚಿನ ಕೆಲಸಗಳು ಬಾಕಿ ಉಳಿದಿದೆ. ಇದು ಪೂರ್ಣಗೊಳ್ಳಲು ಸಾಕಷ್ಟು ಸಮಯ ಹಿಡಿಯುತ್ತದೆ ಎನ್ನಲಾಗಿದೆ.
ಈ ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಂಗಳೂರು ಗ್ರಾಮಾಂತರ & ಕೋಲಾರ, ಆಂಧ್ರ ಪ್ರದೇಶದ ಚಿತ್ತೂರು, ತಮಿಳುನಾಡಿನ ರಾಣಿಪೇಟೆ ಹಾಗೂ ಶ್ರೀಪೆರಂಬದೂರುಗಳನ್ನು ಹಾದು ಹೋಗಿ ಬೆಂಗಳೂರಿಂದ ಚೆನ್ನೈನ್ನು ಸಂಪರ್ಕಿಸುತ್ತದೆ. ಪ್ರಸ್ತುತ 4 ಪಥಗಳನ್ನು ಒಳಗೊಂಡಿರುವ ಹೆದ್ದಾರಿ ಇದಾಗಿದ್ದು, ವಾಹನಗಳ ದಟ್ಟಣೆ ಹೆಚ್ಚಾದರೆ 8 ಪಥಗಳಿಗೆ ವಿಸ್ತರಿಸಬಹುದು.
ಹೊಸ ಬೆಂಗಳೂರು - ಚೆನ್ನೈ ಎಕ್ಸ್ಪ್ರೆಸ್ವೇಯನ್ನು ರೂ.17,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈಗಿರುವ 5 ರಿಂದ 6 ಗಂಟೆ ಪ್ರಯಾಣದ ಅವಧಿಯೂ 2 ರಿಂದ 3 ಗಂಟೆಗಳಿಗೆ ಕಡಿಮೆಯಾಗಬಹುದು ಎಂದು ಹೇಳಲಾಗಿದೆ. ಈ ಹೆದ್ದಾರಿಯು ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಿಗೆ ಸಂಪರ್ಕ ಕೊಂಡಿಯಾಗಿರುವುದು ಮಾತ್ರವಲ್ಲದೆ, ವ್ಯಾಪಾರ - ವಾಣಿಜ್ಯ ಚಟುವಟಿಕೆಗಳು ಸೇರಿದಂತೆ ವಿವಿಧ ಕ್ಷೇತ್ರಗಳು ವೃದ್ಧಿಯಾಗಲು ನೆರವಾಗಲಿದೆ.
ಬೆಂಗಳೂರು - ಮಂಗಳೂರು ಎಕ್ಸ್ಪ್ರೆಸ್ವೇ ನಿರ್ಮಾನಿಸಲು ಸರ್ಕಾರದ ಯೋಜನೆ: ಈ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಹೊಸ ಎಕ್ಸ್ಪ್ರೆಸ್ವೇ 335 ಕಿಲೋಮೀಟರ್ ಉದ್ದವಿರಲಿದ್ದು, 4 ರಿಂದ 6 ಪಥಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications