Bengaluru-Mysuru expressway: ವಿಶೇಷ ಸಮಿತಿ.. ಅಪಘಾತಗಳ ಸಂಖ್ಯೆ ಕಡಿಮೆ ಆಗುತ್ತಾ?
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ (Benagaluru-Mysuru expressway)ಯಲ್ಲಿ ಅಪಘಾತಗಳ ಸಂಖ್ಯೆ ದಿನಂಪ್ರತಿ ಹೆಚ್ಚಾಗುತ್ತಿದೆ. ರಸ್ತೆ ಕಾಮಗಾರಿಯನ್ನು ಅವೈಜಾನಿಕ ಮಾಡಲಾಗಿದೆ ಎಂದು ವ್ಯಾಪಕ ಟೀಕೆಗೆ ಗುರಿಯಾಗಿದ್ದ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ (NHAI) ಕಡೆಗೂ ಎಚ್ಚೆತ್ತುಕೊಂಡಿದ್ದು, ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹೆದ್ದಾರಿ ಪರಿಶೀಲನೆಗೆ ವಿಶೇಷ ಸಮಿತಿಯನ್ನು ರಚಿಸಿದೆ.
ನಿನ್ನೆಯಿಂದ (ಜುಲೈ 17) ಎಕ್ಸ್ಪ್ರೆಸ್ವೇ ಪರಿಶೀಲನಾ ಕಾರ್ಯಗಳು ಶುರುವಾಗಿದ್ದು, ಜುಲೈ 20ರವರೆಗೆ ನಡೆಯಲಿದೆ. ವಿಶೇಷ ಸಮಿತಿಯಲ್ಲಿ ಹೆದ್ದಾರಿ ಪ್ರಾಧಿಕಾರದ ಉಪ ವ್ಯವಸ್ಥಾಪಕ ಪ್ರವೀಣ್ ಕುಮಾರ್, ರಸ್ತೆ ಸುರಕ್ಷತಾ ಸಲಹೆಗಾರ ಸುದರ್ಶನ್.ಕೆ.ಪೊಪ್ತಿ ಹಾಗೂ ಜೈವರ್ಧನ್ ಸಿಂಗ್ ಇದ್ದಾರೆ. ಈ ಸಮಿತಿಗೆ 10 ದಿನದೊಳಗೆ ಪರಿಶೀಲನಾ ವರದಿ ನೀಡುವಂತೆ NHAI ರಸ್ತೆ ಸುರಕ್ಷತಾ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸೂಚಿಸಿದ್ದಾರೆ.

ಇದಿಷ್ಟೇ ಅಲ್ಲದೆ, ಬೆಂಗಳೂರು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಲೋಕಾರ್ಪಣೆಗೊಂಡು 9 ತಿಂಗಳು ಕಳೆದಿದ್ದು, ಇಲ್ಲಿಯವರೆಗೆ 550ಕ್ಕೂ ಹೆಚ್ಚಿನ ಅಪಘಾತಗಳು ನಡೆದಿದ್ದು, ಮೃತಪಟ್ಟವರ ಸಂಖ್ಯೆಯ ಬಗ್ಗೆಯು ಮಾಹಿತಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಮಾಧ್ಯಮಗಳ ವರದಿ ಪ್ರಕಾರ, ವಿವಿಧ ಅಪಘಾತ ಪ್ರಕರಣಗಳಲ್ಲಿ 100 ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ, ಗೃಹ ಸಚಿವ ಪರಮೇಶ್ವರ್ ಅವರು, ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಸಂಖ್ಯೆಗೆ ಬೇಸರ ವ್ಯಕ್ತಪಡಿಸಿದ್ದರು. ಈ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಅವೈಜಾನಿಕ ಕಾಮಗಾರಿಯಿಂದ ಹೆದ್ದಾರಿಯಲ್ಲಿ ಅಪಘಾತಗಳು ನಡೆಯುತ್ತಿತ್ತು. ಸೂಕ್ತ ಕ್ರಮ ಕೈಗೊಳ್ಳುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದರು.
ಅದಕ್ಕೂ ಮೊದಲು ಜೂನ್ ತಿಂಗಳಲ್ಲಿ ರಾಮನಗರ ವ್ಯಾಪ್ತಿಯ ಎಕ್ಸ್ಪ್ರೆಸ್ವೇಯನ್ನು ಸಂಚಾರಿ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲಿಸಿದ್ದರು. ಜುಲೈ 4ರಿಂದ ಜಿಲ್ಲೆಯಲ್ಲಿ ಹಾದುಹೋಗುವ ಹೆದ್ದಾರಿಯಲ್ಲಿ 100 kmph ವೇಗ ಮಿತಿ ದಾಟುವ ಚಾಲಕರ ವಿರುದ್ಧ ಪ್ರಕರಣ ದಾಖಲಿಸುವುದನ್ನು ಅಲ್ಲಿನ ಪೊಲೀಸರು ಶುರು ಮಾಡಿದ್ದರು. ಆ ಬಳಿಕ, ಮಂಡ್ಯ ಜಿಲ್ಲಾಡಳಿತವು ಅದೇ ಕ್ರಮವನ್ನು ಅನುಸರಿಸಿತ್ತು.
ಕೈಗಾರಿಕೆ ಹಾಗೂ ಪ್ರವಾಸೋದ್ಯಮದ ಬೆಳವಣಿಗೆಗಾಗಿ 88 ಕಿಲೋಮೀಟರ್ ಉದ್ದದ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯನ್ನು ನಿರ್ಮಾಣ ಮಾಡಲಾಯಿತು. ಎಕ್ಸ್ಪ್ರೆಸ್ವೇ ನಿರ್ಮಾಣದಿಂದ ಆಗಿರುವ ದೊಡ್ಡ ಅನುಕೂಲವೆಂದರೆ, ಪ್ರಯಾಣದ ಅವಧಿ ಕಡಿಮೆಯಾಗಿರುವುದು. ಈ ಹೆದ್ದಾರಿ ನಿರ್ಮಾಣಕ್ಕೆ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ ಬರೋಬ್ಬರಿ ರೂ.8172 ಕೋಟಿ ಖರ್ಚು ಮಾಡಿದೆ.
ಇದೀಗ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ ಕೂಡ ಎಚ್ಚೆತ್ತುಕೊಂಡಿದ್ದು, ಹೆದ್ದಾರಿಯ ಪರಿಶೀಲನೆಗೆ ವಿಶೇಷ ಸಮಿತಿಯನ್ನು ರಚಿಸಿ, ವರದಿ ನೀಡುವಂತೆ ಸೂಚಿಸಿದೆ. ಈಗಲಾದರೂ, ಅಪಘಾತಗಳಿಗೆ ನಿಖರವಾದ ಕಾರಣ ತಿಳಿದು, ಆ ಸಂಖ್ಯೆಯಲ್ಲಿ ಕಡಿಮೆಗೊಳಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂಬುದು ಮುಂಬರುವ ದಿನಗಳಲ್ಲಿ ತಿಳಿಯಲಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications