Bengaluru Tunnel Road.. ಯಶವಂತಪುರದಿಂದ ಸುರಂಗ ರಸ್ತೆ?, ಕಾರ್ಯಸಾಧ್ಯತಾ ಅಧ್ಯಯನ: ಡಿಸಿಎಂ
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ. 'ಯಶವಂತಪುರ ಮತ್ತು ಸುಮನಹಳ್ಳಿ ನಡುವಿನ ಹೊರವರ್ತುಲ ರಸ್ತೆಯಲ್ಲಿ (Outer Ring Road - ORR) ಸುರಂಗ ರಸ್ತೆ ನಿರ್ಮಿಸಲು ಬಿಬಿಎಂಪಿ (BBMP) ಕಾರ್ಯಸಾಧ್ಯತಾ ಅಧ್ಯಯನ (Feasibility Study) ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಆರ್ಆರ್ ನಗರದಲ್ಲಿ ಭಾನುವಾರ ಆಯೋಜಿಸಿದ್ದ 'ಮನೆ ಬಾಗಿಲಿಗೆ ಬಂತು ಸರ್ಕಾರ' ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, 'ಯಶವಂತಪುರ, ಸುಮನಹಳ್ಳಿ, ಗೊರಗುಂಟೆಪಾಳ್ಯ ಸಮೀಪ ಸುರಂಗ ರಸ್ತೆ (Tunnel Road) ನಿರ್ಮಾಣಕ್ಕೆ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುತ್ತಿದ್ದೇವೆ' ಎಂದು ತಿಳಿಸಿದ್ದಾರೆ. ಇದೇ ವೇಳೆ, ರಾಜ್ಯ ಬಜೆಟ್ನಲ್ಲಿ ಬೆಂಗಳೂರಿಗೆ ಘೋಷಿಸಿದ ವಿವಿಧ ಯೋಜನೆಗಳನ್ನು ನೆನಪಿಸಿಕೊಂಡ ಅವರು, ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ಸರ್ಕಲ್ ವರೆಗಿನ ಸುರಂಗ ರಸ್ತೆ ಕುರಿತಾಗಿಯೂ ಪ್ರಸ್ತಾಪಿಸಿದರು.

ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನ ವೆಚ್ಚವನ್ನು ಕಡಿಮೆಗೊಳಿಸಲು ಮುಂಬರುವ ಮೆಟ್ರೋ ಮಾರ್ಗಗಳ ಕೆಳಭಾಗದಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುವ ಆಲೋಚನೆಯನ್ನು ಉಪಮುಖ್ಯಮಂತ್ರಿಗಳು ಹೊಂದಿದ್ದಾರೆ. 'ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಲು ಮೆಟ್ರೋ ಹಾದುಹೋಗುವ ಕೆಲವು ಮಾರ್ಗಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ (Traffic) ಸಮಸ್ಯೆಯನ್ನು ಬಗೆಹರಿಸಲು ಕಾರ್ಯಸಾಧ್ಯತಾ ಅಧ್ಯಯನಕ್ಕೆ ನಿಯೋಜಿಸಲಾದ ಸಂಸ್ಥೆ (Agency)ಯು 198 ಕಿ.ಮೀ ವ್ಯಾಪ್ತಿಯಲ್ಲಿ ವಿವಿಧ ಸಾರಿಗೆ ವಿಧಾನಗಳ ಕುರಿತಂತೆಯೂ ಪರಿಶೀಲನೆಯನ್ನು ನಡೆಸುತ್ತಿದೆ. ಅದರಲ್ಲಿ ಸುರಂಗ ಮಾರ್ಗವು ಒಂದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 'ಗೊರಗುಂಟೆಪಾಳ್ಯದಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆಯಿದ್ದು, ವಾಯುಪಡೆಯ ಜಾಗವನ್ನು ಸ್ವಾಧೀನಪಡಿಸಿಕೊಳ್ಳುವ ಇದನ್ನು ಪರಿಣಾಮಕಾರಿಯಾಗಿ ನಿವಾರಿಸಬಹುದು' ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹಿಂದೆ ವಿವಿಧ ಮಾಧ್ಯಮಗಳು ವರದಿ ಮಾಡಿದಂತೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಲು 'ಸುರಂಗ ರಸ್ತೆ' ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕೆಲವೊಂದು ಪ್ರದೇಶಗಳನ್ನು ಗುರಿತಿಸಿತ್ತು. ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ, ಮಿಲ್ಲರ್ ಸರ್ಕಲ್, ಚಾಲುಕ್ಯ ಸರ್ಕಲ್, ಟ್ರಿನಿಟಿ ಸರ್ಕಲ್, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ತುಮಕೂರು ರಸ್ತೆಯಿಂದ ಯಶವಂತಪುರ ಜಂಕ್ಷನ್, ಹೊರ ವರ್ತುಲ ರಸ್ತೆ, ಗೊರಗುಂಟೆಪಾಳ್ಯ, ಕೆಆರ್ ಪುರಂ, ಸಿಲ್ಕ್ ಬೋರ್ಡ್ ಸೇರಿದ್ದವು.
ಬೆಂಗಳೂರಿನಲ್ಲಿ ಸುರಂಗ ರಸ್ತೆ (Bengaluru Tunnel Road)ಯ 1 ಕಿಲೋಮೀಟರ್ ನಿರ್ಮಾಣ ಕಾಮಗಾರಿಗೆ ಸುಮಾರು ರೂ.450 ಕೋಟಿಯನ್ನು ಖರ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ. ನಿರ್ಮಾಣ ಕೆಲಸಗಳನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ರಸ್ತೆಗೆ ಟೋಲ್ ಶುಲ್ಕವು ಇರಲಿದೆ ಎಂದು ಕೆಲವು ತಿಂಗಳ ಮೊದಲು ವರದಿಯಾಗಿತ್ತು.
ಇನ್ನು, ರಾಜ್ಯ ಬಜೆಟ್ನಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆಗಳನ್ನು ನೀಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಗೆ ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್ ಬಸ್, 820 ಬಿಎಸ್-6 ಆಧಾರಿತ ಡೀಸೆಲ್ ಬಸ್ ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಜೊತೆಗೆ ನಗರದ ಜೀವನಾಡಿಯಾಗಿ ಬದಲಾಗುತ್ತಿರುವ ಮೆಟ್ರೋ ಯೋಜನೆಗೂ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications