ಶೀಘ್ರದಲ್ಲೇ ಹೆಚ್ಚಾಗಲಿದೆ ಹೆದ್ದಾರಿಗಳಲ್ಲಿ ಚಲಿಸುವ ವಾಹನಗಳ ಗರಿಷ್ಠ ವೇಗದ ಮಿತಿ
ಎಕ್ಸ್ಪ್ರೆಸ್ವೇಯಲ್ಲಿ ಚಲಿಸುವ ವಾಹನಗಳ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರು ಶೀಘ್ರದಲ್ಲೇ ಹೆದ್ದಾರಿ ಹಾಗೂ ಎಕ್ಸ್ಪ್ರೆಸ್ವೇಗಳಲ್ಲಿ ಚಲಿಸುವ ವಾಹನಗಳ ವೇಗವನ್ನು ಹೆಚ್ಚಿಸುವ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

ನಾವು ವೇಗದ ಮಿತಿಯನ್ನು ಹೆಚ್ಚಿಸುವುದರ ಪರವಾಗಿದ್ದೇವೆ ಆದರೆ ಸುಪ್ರೀಂ ಕೋರ್ಟ್ ಹಾಗೂ ಕೆಲವು ಹೈಕೋರ್ಟ್ಗಳಿಂದ ಕೆಲವು ಅಡೆ ತಡೆಗಳಿವೆ, ಇದರಿಂದಾಗಿ ನಾವು ಬಯಸಿದರೂ ವೇಗದ ಮಿತಿಯನ್ನು ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಸಂಸತ್ತಿನಲ್ಲಿ ಮಸೂದೆಯ ಮೂಲಕ ವೇಗದ ಮಿತಿಯನ್ನು ಹೆಚ್ಚಿಸಲು ಸರ್ಕಾರವು ಸಿದ್ಧತೆ ನಡೆಸುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ವಾಹನಗಳ ವೇಗದ ಮಿತಿಯ ಭಾರತದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ವಾಹನಗಳ ವೇಗದ ಮಿತಿಯನ್ನು ಹೆಚ್ಚಿಸಿದರೆ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತವೆ ಎಂದು ಹೇಳಲಾಗುತ್ತದೆ. ನಾವು ಈ ಮನಸ್ಥಿತಿಯಿಂದ ಹೊರ ಬರಬೇಕು. ಹೆದ್ದಾರಿಗಳು ಹಾಗೂ ಎಕ್ಸ್ಪ್ರೆಸ್ವೇಗಳಲ್ಲಿ ವಾಹನಗಳ ವೇಗದ ಮಿತಿ ಪ್ರತಿ ಗಂಟೆಗೆ 140 ಕಿ.ಮೀ ಆಗಿರಬೇಕು ಎಂದು ತಾನು ವೈಯಕ್ತಿಕವಾಗಿ ನಂಬುತ್ತೇನೆ ಎಂದು ಗಡ್ಕರಿ ಹೇಳಿದರು.

ರಾಷ್ಟ್ರೀಯ ಹೆದ್ದಾರಿಗಳ ನಾಲ್ಕು ಪಥದ ರಸ್ತೆಗಳಲ್ಲಿ ಚಲಿಸುವ ವಾಹನಗಳ ವೇಗದ ಮಿತಿ ಕನಿಷ್ಠ 100 ಕಿ.ಮೀ ಆಗಿರಬೇಕು. ಎರಡು ಪಥದ ರಸ್ತೆಗಳು 80 ಕಿ.ಮೀಗಳಿಗೆ ಹಾಗೂ ನಗರ ರಸ್ತೆಗಳ ವೇಗದ ಮಿತಿಯನ್ನು 75 ಕಿ.ಮೀಗಳಿಗೆ ಹೆಚ್ಚಿಸಬೇಕು ಎಂದು ನಿತಿನ್ ಗಡ್ಕರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್ಪ್ರೆಸ್ವೇಯ ಎರಡೂ ಬದಿಗಳಲ್ಲಿ ಒಂದು ಬ್ಯಾರಿಕೇಡಿಂಗ್ ಮಾಡಲಾಗಿದ್ದು, ಒಂದು ಪ್ರಾಣಿಯೂ ಪ್ರವೇಶಿಸಲು ಸಾಧ್ಯವಿಲ್ಲವೆಂದು ಅವರು ಹೇಳಿದರು.

ವಿವಿಧ ವಾಹನಗಳಿಗೆ ವಿವಿಧ ರೀತಿಯ ಗರಿಷ್ಠ ವೇಗದ ಮಿತಿಯನ್ನು ನಿಗದಿಪಡಿಸಲಾಗುವುದು ಎಂದು ಗಡ್ಕರಿ ಹೇಳಿದರು. ನ್ಯಾಯಾಲಯಗಳ ಕುರಿತು ಪ್ರತಿಕ್ರಿಯೆ ನೀಡಿದ ನಿತಿನ್ ಗಡ್ಕರಿರವರು, ಪ್ರಜಾಪ್ರಭುತ್ವದಲ್ಲಿ ನಮಗೆ ಕಾನೂನುಗಳನ್ನು ಮಾಡುವ ಹಕ್ಕಿದೆ ಹಾಗೂ ನ್ಯಾಯಾಧೀಶರಿಗೆ ಕಾನೂನನ್ನು ಅರ್ಥೈಸುವ ಹಕ್ಕಿದೆ. ಭಾರತೀಯ ರಸ್ತೆಗಳಲ್ಲಿ ವಾಹನಗಳ ವೇಗದ ಮಿತಿಯನ್ನು ಪರಿಷ್ಕರಿಸಲು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಹೇಳಿದರು.

ದೇಶವು ಪರಿಸರ ಮಾಲಿನ್ಯ ಹಾಗೂ ಆರ್ಥಿಕತೆಯಿಂದಾಗಿ ಹಲವು ಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಹೇಳಿದ ಅವರು, ಕೇಂದ್ರ ಸರ್ಕಾರವು ಸದ್ಯಕ್ಕೆ ಇಂಧನ ಆಮದಿಗಾಗಿ ವಾರ್ಷಿಕವಾಗಿ ರೂ. 8 ಲಕ್ಷ ಕೋಟಿ ವ್ಯಯಿಸುತ್ತಿದೆ. ಈ ಪ್ರಮಾಣವು ಮುಂದಿನ ಐದು ವರ್ಷಗಳಲ್ಲಿ ರೂ. 25 ಲಕ್ಷ ಕೋಟಿಗಳಾಗುತ್ತದೆ ಎಂದು ಹೇಳಿದರು. ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬಳಕೆಯಿಂದ ಮಾಲಿನ್ಯವು ಹೆಚ್ಚುತ್ತಿದೆ.

ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಶುದ್ಧ ಇಂಧನ ಮೂಲಗಳ ಬಳಕೆಯನ್ನು ಹೆಚ್ಚಿಸಬೇಕು. ದೇಶದಲ್ಲಿ ಲಿಥಿಯಂ ಅಧಿಕ ಪ್ರಮಾಣದಲ್ಲಿ ಲಭ್ಯವಿದ್ದು, ಭಾರತವು ತನ್ನದೇ ಆದ ಲಿಥಿಯಂ ಅಗತ್ಯವನ್ನು ಉತ್ಪಾದಿಸಬಹುದು. ಮುಂಬರುವ ದಿನಗಳಲ್ಲಿ ಲಿಥಿಯಂ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿಯಾಗಲಿದೆ. ನಮ್ಮಲ್ಲಿ ಸಾಕಷ್ಟು ಲಿಥಿಯಂ ಇದ್ದು ಅದನ್ನು ನಾವು ಇತರ ದೇಶಗಳಿಗೆ ರಫ್ತು ಮಾಡಬಹುದು.

ಭವಿಷ್ಯದಲ್ಲಿ ಭಾರತವು ಲಿಥಿಯಂ ಐಯಾನ್ ಬ್ಯಾಟರಿಗಳನ್ನು ರಫ್ತು ಮಾಡಲಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಮೂಲಸೌಕರ್ಯವನ್ನು ಸಿದ್ಧಪಡಿಸಲಾಗುತ್ತಿದೆ. ಇದರಿಂದ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಭಾರತದಲ್ಲಿ ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 800 ಕಿ.ಮೀನಷ್ಟು ದೂರ ಸಾಗುವ ಎಲೆಕ್ಟ್ರಿಕ್ ಕಾರ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ಮೂಲ ಸೌಕರ್ಯ ಒದಗಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಒದಗಿಸುವ ಸಲುವಾಗಿ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರಿರುವುದರಿಂದ ಸಾಕಷ್ಟು ಸಂಖ್ಯೆಯ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಆದರೆ ಚಾರ್ಜಿಂಗ್ ಕೇಂದ್ರಗಳು ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದ ಬೇರೆ ದಾರಿ ಕಾಣದೇ ಅನಿವಾರ್ಯವಾಗಿ ಪೆಟ್ರೋಲ್, ಡೀಸೆಲ್ ವಾಹನಗಳನ್ನೇ ಬಳಸುತ್ತಿದ್ದಾರೆ. ಸಚಿವ ನಿತಿನ್ ಗಡ್ಕರಿ ರವರ ಈ ಹೇಳಿಕೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸ ಬಯಸುವವರಿಗೆ ಸಂತಸವನ್ನುಂಟು ಮಾಡಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಮೂಲಕ ಇವಿಗಳಿಗೆ ಅಗತ್ಯವಾದ ಮೂಲ ಸೌಕರ್ಯವನ್ನು ಸುಧಾರಿಸುವ ಕೆಲಸ ಮಾಡುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.


Click it and Unblock the Notifications