ಕರೋನಾ ವೈರಸ್: ಭಾರತದ ಮುನ್ನೆಚ್ಚರಿಕಾ ಕ್ರಮಗಳಿಗೆ ಶ್ಲಾಘನೆ
ಕರೋನಾ ವೈರಸ್ನಿಂದ ಇಡೀ ಜಗತ್ತು ಬೆಚ್ಚಿ ಬಿದ್ದಿದೆ. ಇದುವರೆಗೂ, ವಿಶ್ವಾದ್ಯಂತ 8,000ಕ್ಕೂ ಹೆಚ್ಚು ಜನರು ಕರೋನಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಜನರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರನ್ನು ಪ್ರತ್ಯೇಕ ಕೋಣೆಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನಾ ವೈರಸ್ನಿಂದ 85,751 ಜನರು ಚೇತರಿಸಿಕೊಂಡಿದ್ದರೂ, ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಚೀನಾ, ಇಟಲಿ, ಇರಾನ್, ಸ್ಪೇನ್, ಫ್ರಾನ್ಸ್, ಯುನೈಟೆಡ್ ಸ್ಟೇಟ್ಸ್, ಯುಕೆ, ದಕ್ಷಿಣ ಕೊರಿಯಾ, ನೆದರ್ಲ್ಯಾಂಡ್ಸ್, ಸ್ವಿಟ್ಜರ್ಲೆಂಡ್, ಜಪಾನ್ ಹಾಗೂ ಜರ್ಮನಿಯಂತಹ ದೇಶಗಳಲ್ಲಿ ಈ ಪ್ರಮಾಣ ಹೆಚ್ಚಾಗಿದೆ.

ಈ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕರೋನಾ ವೈರಸ್ ಹರಡುವಿಕೆಯು ಪ್ರಮಾಣ ಕಡಿಮೆಯಾಗಿದೆ ಎಂಬುದೇ ಸಮಾಧಾನದ ಸಂಗತಿ. ಈ ದೇಶಗಳಿಗೆ ಹೋಲಿಸಿದರೆ, ಭಾರತವು ಅತಿ ಹೆಚ್ಚು ಜನಸಂಖ್ಯಾ ಸಾಂದ್ರತೆಯನ್ನು ಹೊಂದಿರುವ ಕಾರಣ ಕರೋನಾ ವೈರಸ್ ಭಾರತದಲ್ಲಿ ವೇಗವಾಗಿ ಹರಡುತ್ತಿದೆ.

ಭಾರತದಲ್ಲಿ ಇದುವರೆಗೂ 168 ಜನರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಕರೋನಾ ವೈರಸ್ ಮತ್ತಷ್ಟು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದರ ಜೊತೆಗೆ ರಾಜ್ಯ ಸರ್ಕಾರಗಳು ಸಹ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಅದರಂತೆ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಆರೋಗ್ಯ ಇಲಾಖೆಯು ವಿಮಾನ ನಿಲ್ದಾಣಗಳಲ್ಲಿ ಸರ್ಪಗಾವಲು ಹಾಕಲಾಗಿದ್ದು, ವಿದೇಶದಿಂದ ಬರುವ ಪ್ರಯಾಣಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗಿದೆ.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ಸಾರ್ವಜನಿಕರ ಮೊಬೈಲ್ ಕಾಲರ್ ಟ್ಯೂನ್ ಮೂಲಕ ಕರೋನಾದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕರೋನಾ ವೈರಸ್ ಹರಡುವುದನ್ನು ತಡೆಯುವ ಭಾರತದ ಪ್ರಯತ್ನಕ್ಕೆ ಜಾಗತಿಕ ಮೆಚ್ಚುಗೆ ವ್ಯಕ್ತವಾಗಿದೆ.

ಇಂಟರ್ ನ್ಯಾಷನಲ್ ರೋಡ್ ಫೆಡರೇಶನ್ (ಐಆರ್ ಎಫ್) ಭಾರತ ಸರ್ಕಾರವನ್ನು ಅಭಿನಂದಿಸಿದೆ. ಕರೋನವೈರಸ್ ಹರಡುವುದನ್ನು ತಡೆಯಲು ಭಾರತ ಸರ್ಕಾರ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದೆ. ಇದೇ ವೇಳೆ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಐಆರ್ ಎಫ್ ಒತ್ತಾಯಿಸಿದೆ.

ಐಆರ್ ಎಫ್ ಪ್ರಕಾರ, 2018ರಲ್ಲಿ ಭಾರತದಲ್ಲಿ 4.67 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿವೆ. ಇದರಲ್ಲಿ 1.51 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಅಂದರೆ ಪ್ರತಿ ದಿನ ಸರಾಸರಿ 417 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಆದರೆ ಕೆಲವೇ ಜನರಿಗೆ ಕರೋನಾ ವೈರಸ್ ಇರುವುದು ಪತ್ತೆಯಾದ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆ ವಹಿಸಿವೆ ಎಂದು ಹೇಳಿದೆ.


Click it and Unblock the Notifications