ಬೆಂಗಳೂರಿನ ಮೊದಲ ಸುರಂಗ ರಸ್ತೆಗೆ ಕ್ಯಾಬಿನೆಟ್ ಅಸ್ತು: ಪ್ರಯಾಣದ ಅವಧಿ ಭಾರಿ ಇಳಿಕೆ.. ಎಲ್ಲಿಂದ, ಎಲ್ಲಿಗೆ?
ಬೆಂಗಳೂರು (Bangalore) ಐಟಿ ಹಬ್ ಎಂದು ಖ್ಯಾತಿಗಳಿಸಿದ್ದು, ಲಕ್ಷಾಂತರ ಜನರು ಬದುಕನ್ನು ಕಟ್ಟಿಕೊಂಡಿದ್ದಾರೆ. ನಗರದಲ್ಲಿ ಸಂಚಾರ ದಟ್ಟಣೆ ಬಹುದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ. ರೂ.12,690 ಕೋಟಿ ವೆಚ್ಚದಲ್ಲಿ ಸುರಂಗ ರಸ್ತೆ (Tunnel Road) ನಿರ್ಮಾಣ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಇದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಅವರ ಕನಸಿನ ಯೋಜನೆಯಾಗಿದೆ.
ಮೊದಲ ಹಂತದಲ್ಲಿ ಸುಮಾರು 18 ಕಿಲೋಮೀಟರ್ ಉದ್ದದ ಸುರಂಗ ರಸ್ತೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಹೆಬ್ಬಾಳ ಮೇಲ್ಸೇತುವೆಯಿಂದ (ಎಸ್ಟೀಮ್ ಮಾಲ್) ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಸಂಪರ್ಕವನ್ನು ಕಲ್ಪಿಸಲಿದೆ. ಈ ಸುರಂಗ ರಸ್ತೆಯನ್ನು ಟ್ವಿನ್ ಟ್ಯೂಬ್ (ಎರಡು ಕೊಳವೆ ಆಕಾರ) ಮಾದರಿಯಲ್ಲಿ ನಿರ್ಮಿಸಲು ಯೋಜಿಸಲಾಗಿದ್ದು, ಐದು ಪ್ರವೇಶ (Entry) ಹಾಗೂ ನಿರ್ಗಮನ (Exit) ದ್ವಾರಗಳಿರಲಿವೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ (H.K Patil) ಅವರು, 'ಬೆಂಗಳೂರಿನಲ್ಲಿ ವಾಹನಗಳ ದಟ್ಟಣೆ ಕಡಿಮೆ ಮಾಡಲು ಸುರಂಗ ರಸ್ತೆ ನಿರ್ಮಾಣ ಉತ್ತಮವಾದ ಯೋಜನೆಯಾಗಿದೆ. ಈ ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು' ಎಂದು ಹೇಳಿದ್ದಾರೆ.
ಸದ್ಯ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ಗೆ ತೆರಳಲು 1 ಗಂಟೆಗೂ ಹೆಚ್ಚಿನ ಸಮಯಾವಕಾಶ ಬೇಕಾಗುತ್ತದೆ. ಸುರಂಗ ರಸ್ತೆ ನಿರ್ಮಾಣಗೊಂಡ ಬಳಿಕ, ಇದು 20 ರಿಂದ 25 ನಿಮಿಷಗಳಿಗೆ ಕಡಿಮೆಯಾಗಲಿದೆ. ಈ ಸುರಂಗದ ಎತ್ತರವು 10 ಮೀಟರ್ ಇರಲಿದ್ದು, ವಾಹನಗಳು ಗಂಟೆಗೆ 40 - 60 ಕಿಲೋಮೀಟರ್ ಗರಿಷ್ಠ ವೇಗದಲ್ಲಿ ಸಂಚರಿಸಲು ಸಾಧ್ಯವಾಗುವಂತೆ ನಿರ್ಮಿಸಬಹುದು ಎಂದು ತಿಳಿದುಬಂದಿದೆ.

ಬೆಂಗಳೂರಿನ ವಿಹಂಗಮ ನೋಟವನ್ನು ಪ್ರವಾಸಿಗರಿಗೆ ಒದಗಿಸಲು 250 ಮೀಟರ್ ಎತ್ತರದ ವೀಕ್ಷಣಾ ಗೋಪುರ (ಸ್ಕೈ ಡೆಕ್) ನಿರ್ಮಾಣಕ್ಕೂ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಈ ಯೋಜನೆಗೆ ರೂ.500 ಕೋಟಿ ವೆಚ್ಚವಾಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರನ್ನು ಅತ್ಯತ್ತಮ ಪ್ರವಾಸಿ ಕೇಂದ್ರವನ್ನಾಗಿ ಮಾಡಲು ನೆರವಾಗಲಿದೆ.
ಸ್ಕೈ ಡೆಕ್ ನಿರ್ಮಾಣಕ್ಕೆ ಯಾವುದೇ ಸ್ಥಳವನ್ನು ಸರ್ಕಾರ ಗುರುತಿಸಿಲ್ಲ. ಆದಾಗ್ಯೂ ಎರಡು - ಮೂರು ಸಂಭಾವ್ಯ ಸ್ಥಳಗಳನ್ನು ಪಟ್ಟಿ ಮಾಡಿದ್ದು, ಬಹುತೇಕ ನೈಸ್ ರಸ್ತೆ ಸಮೀಪದಲ್ಲಿ ನಿರ್ಮಾಣ ಮಾಡಬಹುದು ಎಂದು ಮೂಲಗಳು ತಿಳಿಸಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದಲ್ಲಿ 52 ಹೊಸ ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲು ಕೂಡ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇನ್ನು, ಹೆಬ್ಬಾಳ ಮೇಲ್ಸೇತುವೆಯಿಂದ (ಎಸ್ಟೀಮ್ ಮಾಲ್) ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ ಸುರಂಗ ರಸ್ತೆ ನಿರ್ಮಾಣಗೊಂಡ ಮೇಲೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸಂಚಾರ ದಟ್ಟಣಿ ಕಿರಿಕಿರಿ ದೂರವಾಗುತ್ತದೆ. ಇವೆಲ್ಲ ಒಂದು ಕಡೆಯಾದರೆ ಈ ರಸ್ತೆ ಕಾಮಗಾರಿ ಮಾಡಲು ಹೆಚ್ಚಿನ ಹಣ ವ್ಯಯಿಸಬೇಕಾಗಿದ್ದು, ಇದೇ ಖರ್ಚಿನಲ್ಲಿ ಮೆಟ್ರೋ ಮಾರ್ಗ ನಿರ್ಮಿಸಿದರೆ ಅಧಿಕ ಸಂಖ್ಯೆಯಲ್ಲಿ ಜನಸಾಮಾನ್ಯರು ಪ್ರಯಾಣಿಸಬಹುದು ಎಂದು ಹಲವರ ಅಭಿಪ್ರಾಯವಾಗಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications