ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ಘೋಷಣೆ: 'ಕುಂದ' ಸವಿಯಬಹುದು ನೋಡ್ರಲಾ!
ದೇಶಾದ್ಯಂತ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ಸೆಮಿ ಪ್ರೀಮಿಯಂ ಹೈಸ್ವೀಡ್ ರೈಲಾಗಿ ಕಾರ್ಯಾಚರಣೆ ನಡೆಸುತ್ತಿದೆ. ಇದೀಗ, ಉತ್ತರ ಕರ್ನಾಟಕ ಜನರಿಗೆ ದೀಪಾವಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಬೆಂಗಳೂರು - ಧಾರವಾಡ ನಡುವೆ ಸಂಚರಿಸುವ ಈ ರೈಲನ್ನು ಬೆಳಗಾವಿವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, 'ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರು (Bengaluru) - ಧಾರವಾಡ (Dharwad)ದಿಂದ ಬೆಳಗಾವಿ (Belagavi)ವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ' ಎಂದು ಹೇಳಿದ್ದಾರೆ.

'ಬೆಂಗಳೂರು-ಬೆಳಗಾವಿ ನಡುವೆ ಸಂಚರಿಸುವ ಈ ವಂದೇ ಭಾರತ್ (ರೈಲು ಸಂಖ್ಯೆ 20661) ಬೆಳಗ್ಗೆ 5.45ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 1.30ಕ್ಕೆ ಬೆಳಗಾವಿಗೆ ಬರಲಿದೆ. ಮಧ್ಯಾಹ್ನ 2ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ. ಶ್ರೀಘ್ರದಲ್ಲಿ ಈ ರೈಲು ಸಂಚಾರಕ್ಕೆ ದಿನಾಂಕ ನಿಗದಿಯಾಗಲಿದೆ. ನನ್ನ ಮನವಿಗೆ ಸ್ಪಂದಿಸಿ, ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದು ಪೋಸ್ಟ್ ಮಾಡಿದ್ದಾರೆ.
ಇತ್ತೀಚೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದರು. 'ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ಸಂಪರ್ಕವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರು - ಹುಬ್ಬಳ್ಳಿ - ಧಾರವಾಡ ಮಾರ್ಗದಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಬೆಳಗಾವಿ ನಗರದವರೆಗೆ ವಿಸ್ತರಿಸುವಂತೆ ಮನವಿ ಮಾಡಿದ್ದರು.

ಬೆಳಗಾವಿ - ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ಓಡಾಟ ನಡೆಸುವುದರಿಂದ ಪ್ರಯಾಣಿಕರಿಗೆ ದೊಡ್ಡಮಟ್ಟದ ಅನುಕೂಲವಾಗಲಿದ್ದು, ಸಮಯಾವಕಾಶ ಉಳಿತಾಯವಾಗಲಿದೆ. ಬೇರೆಲ್ಲ ಎಕ್ಸ್ಪ್ರೆಸ್ ರೈಲುಗಳಿಗೆ ಹೋಲಿಸಿದರೆ 2 ಗಂಟೆ ಬೇಗ ಪ್ರಯಾಣಿಸಬಹುದು. ಸದ್ಯ, ಬೆಳಗಾವಿ - ಬೆಂಗಳೂರು ನಡುವೆ ಸಂಚರಿಸುವ ಕೆಎಸ್ಆರ್ ಬೆಂಗಳೂರು ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಬೆಳಗಾವಿಯಿಂದ ರಾತ್ರಿ 9 ಗಂಟೆಗೆ ಹೊರಡಲಿದ್ದು, ಬೆಳಗ್ಗೆ 7.30ಕ್ಕೆ ಬೆಂಗಳೂರು ತಲುಪಲಿದೆ.
ಕರ್ನಾಟಕವು ಮತ್ತಷ್ಟು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೂ ಸಾಕ್ಷಿಯಾಗಲಿದೆ. ಕೆಲವೇ ದಿನಗಳ ಹಿಂದೆ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ, ಮಂಗಳೂರು - ಮಡಗಾಂ ನಡೆವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಮಂಗಳೂರು - ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಕೂಡ ಫಲಪ್ರದವಾಗಿದೆ' ಎಂದು ಹೇಳಿದ್ದರು.
ವಂದೇ ಭಾರತ್ ಎಕ್ಸ್ಪ್ರೆಸ್ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ರೈಲು ಗಂಟೆಗೆ 160 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಆದರೆ, ಸುರಕ್ಷತೆಯ ದೃಷ್ಟಿಯಿಂದ ಗಂಟೆಗೆ 130 ಕಿ.ಮೀ ವೇಗದವರೆಗೂ ಓಡಾಡ ನಡೆಸಲಿದೆ. ವಂದೇ ಭಾರತ್ ರೈಲು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದ್ದು, ಆರಾಮದಾಯ ಆಸನ ವ್ಯವಸ್ಥೆ, ಸಂಪೂರ್ಣ ಹವಾ ನಿಯಂತ್ರಿತ ಬೋಗಿ, ವೈಫೈ, ಜೈವಿಕ ಶೌಚಾಲಯ ಹಾಗೂ ಸ್ವಯಂ ಚಾಲಿತ ಬಾಗಿಲನ್ನು ಒಳಗೊಂಡಿದೆ.
ಇನ್ನು, ಬೆಂಗಳೂರು - ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ಬೆಳಗಾವಿವರೆಗೆ ವಿಸ್ತರಣೆ ಮಾಡಿರುವುದು ಉತ್ತರ ಕರ್ನಾಟಕ ಜನರಿಗೆ ಖುಷಿ ನೀಡಿದೆ. ಮುಂಬರುವ ದಿನಗಳಲ್ಲಿ ಬಹು - ಬೇಡಿಕೆಯ ಮಾರ್ಗಗಳಾದ ಬೆಂಗಳೂರು - ಶಿವಮೊಗ್ಗ, ಬೆಂಗಳೂರು - ಕಲಬುರಗಿ ನಡುವೆಯೂ ಈ ರೈಲು ಸಂಚಾರ ನಡೆಸುವ ಸಾಧ್ಯತೆಯಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications