ಹಳೆ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿದ ಹರಿಯಾಣ ಪೊಲೀಸರು
ಸುಪ್ರೀಂ ಕೋರ್ಟ್, ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) 10 ವರ್ಷ ಹಳೆಯ ಡೀಸೆಲ್ ವಾಹನ ಹಾಗೂ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಆದರೆ ಈ ನಿಷೇಧದ ಹೊರತಾಗಿಯೂ ಹಲವರು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಹಳೆಯ ವಾಹನಗಳನ್ನು ಚಾಲನೆ ಮಾಡುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಹರಿಯಾಣ ರಾಜ್ಯದ ಗುರುಗ್ರಾಮ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಿದ್ದಾರೆ.

ಈ ವಿಶೇಷ ಕಾರ್ಯಾಚರಣೆ ಅಡಿಯಲ್ಲಿ ಹಳೆಯ ವಾಹನಗಳನ್ನು ನಿರ್ವಹಿಸುವ ಬಗ್ಗೆ ಹಾಗೂ ಅದರಿಂದ ಉಂಟಾಗುವ ಅಪಾಯಗಳ ಬಗ್ಗೆ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಹಳೆಯ ವಾಹನಗಳಿಂದ ಪರಿಸರಕ್ಕೆ ಹೆಚ್ಚು ಹಾನಿಯಾಗುತ್ತದೆ. ವಾಹನ ಸವಾರರು ಅವುಗಳ ಬಳಕೆಯನ್ನು ನಿಲ್ಲಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ.

ಹರಿಯಾಣ ರಾಜ್ಯದ 14 ಜಿಲ್ಲೆಗಳು ರಾಷ್ಟ್ರೀಯ ರಾಜಧಾನಿ ಪ್ರದೇಶದ ವ್ಯಾಪ್ತಿಯಲ್ಲಿ ಬರುತ್ತವೆ. ಇವುಗಳಲ್ಲಿ ಗುರುಗ್ರಾಮ ಹಾಗೂ ಫರಿದಾಬಾದ್ ಗಳು ಸೇರಿವೆ. 10 ವರ್ಷಕ್ಕಿಂತ ಮೇಲ್ಪಟ್ಟ ಡೀಸೆಲ್ ವಾಹನಗಳು ಹಾಗೂ 15 ವರ್ಷಕ್ಕಿಂತ ಮೇಲ್ಪಟ್ಟ ಪೆಟ್ರೋಲ್ ವಾಹನಗಳ ಬಳಕೆಯನ್ನು ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ವಾತಾವರಣ ತೀರಾ ಹದಗೆಟ್ಟಿರುವುದು ಇದಕ್ಕೆ ಪ್ರಮುಖ ಕಾರಣ.

ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳು ಈ ಪ್ರದೇಶದಲ್ಲಿ ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವೆಂದು ಪರಿಗಣಿಸಲಾಗಿದೆ. ವಿಶೇಷವಾಗಿ ಹಳೆಯ ವಾಹನಗಳಿಂದ ಹೊರ ಬರುವ ಹೊಗೆಯಿಂದ ಪರಿಸರ ಹಾಳಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಲಾಗುತ್ತಿದೆ. ಈ ವಿಶೇಷ ಕಾರ್ಯಾಚರಣೆಯ ಅಡಿಯಲ್ಲಿ ಪೊಲೀಸ್ ಅಧಿಕಾರಿಗಳು ಟ್ಯಾಕ್ಸಿ ಹಾಗೂ ಆಟೋ ನಿಲ್ದಾಣಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಇದರ ಜೊತೆಗೆ ಇತರ ಸಾರ್ವಜನಿಕ ಸ್ಥಳಗಳಲ್ಲಿಯೂ ಪೊಲೀಸ್ ಸಿಬ್ಬಂದಿ ಜಾಗೃತಿ ಮೂಡಿಸಲಿದ್ದಾರೆ. ಈ ಕಾರ್ಯಾಚರಣೆ ವೇಳೆ ಯಾರಾದರೂ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ರಸ್ತೆಗಿಳಿಯುವ ಹಳೆಯ ವಾಹನಗಳ ವಿರುದ್ಧ ಮತ್ತಷ್ಟು ಕಾರ್ಯಾಚರಣೆ ನಡೆಸುವ ನಿರೀಕ್ಷೆಗಳಿವೆ.

ಭಾರತದಲ್ಲಿ ಹಳೆಯ ವಾಹನಗಳ ಬಳಕೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಈಗಾಗಲೇ ವೆಹಿಕಲ್ ಸ್ಕ್ರ್ಯಾಪೇಜ್ ನೀತಿಯನ್ನು ಜಾರಿಗೆ ತಂದಿದೆ ಎಂಬುದು ಗಮನಾರ್ಹ. ಈ ನೀತಿಯು ಭಾರತದಲ್ಲಿ ಹಳೆಯ ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯದ ಸಮಸ್ಯೆಯನ್ನು ತಡೆಯುವ ನಿರೀಕ್ಷೆಗಳಿವೆ. ಇದರ ಜೊತೆಗೆ ವೆಹಿಕಲ್ ಸ್ಕ್ರ್ಯಾಪೇಜ್ ನೀತಿಯಿಂದಾಗಿ ಹೊಸ ವಾಹನಗಳ ಮಾರಾಟವೂ ಹೆಚ್ಚಾಗುವ ಸಾಧ್ಯತೆಗಳಿವೆ.

ವಾಯು ಮಾಲಿನ್ಯದ ಸಮಸ್ಯೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಮುಂದಾಗಿದೆ. ಕೇಂದ್ರ ಸರ್ಕಾರವು ಫೇಮ್ ಇಂಡಿಯಾ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುತ್ತದೆ. ಜೊತೆಗೆ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದಂತೆ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಸ್ಟಾರ್ಟ್ ಅಪ್ ಕಂಪನಿಗಳು ಸೇರಿದಂತೆ ಹಲವು ಖ್ಯಾತ ನಾಮ ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಹಲವು ದಶಕಗಳ ಹಿಂದೆ ದೇಶದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ್ದ ಚೇತಕ್ ಸ್ಕೂಟರ್ ಅನ್ನು ಈಗ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸಿ ಮಾರಾಟ ಮಾಡಲಾಗುತ್ತಿದೆ.

ಇನ್ನು ಕ್ಯಾಬ್ ಸೇವೆ ನೀಡುವುದರಲ್ಲಿ ಜನಪ್ರಿಯವಾಗಿದ್ದ Ola ಕಂಪನಿಯು ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿಟ್ಟಿದ್ದು, ಕಳೆದ ತಿಂಗಳಷ್ಟೇ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಇತ್ತೀಚಿಗೆ ಈ ಎಲೆಕ್ಟ್ರಿಕ್ ಸ್ಕೂಟರಿನ ಮಾರಾಟವನ್ನು ಆರಂಭಿಸಿರುವ ಕಂಪನಿಯು ಮೊದಲ ದಿನವೇ ಸುಮಾರು ರೂ. 600 ಕೋಟಿಗಳಷ್ಟು ವಹಿವಾಟು ನಡೆಸಿತ್ತು.

ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಹೇಳುವುದಾದರೆ ಭಾರತೀಯ ಮೂಲದ Tata Motors ಕಂಪನಿಯು Nexon ಹಾಗೂ Tigor ಎಲೆಕ್ಟ್ರಿಕ್ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಉಳಿದ ಕಂಪನಿಯ ಎಲೆಕ್ಟ್ರಿಕ್ ಕಾರುಗಳಿಗೆ ಹೋಲಿಸಿದರೆ Tata Nexon ಎಲೆಕ್ಟ್ರಿಕ್ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ ಎಲೆಕ್ಟ್ರಿಕ್ ಕಾರು ಪೂರ್ತಿಯಾಗಿ ಚಾರ್ಜ್ ಆದ ನಂತರ ಹೆಚ್ಚು ದೂರ ಚಲಿಸುತ್ತದೆ ಹಾಗೂ ಸ್ಪರ್ಧಾತ್ಮಕ ಬೆಲೆಯನ್ನು ಹೊಂದಿದೆ ಎಂಬುದು ಈ ಕಾರಿನ ಜನಪ್ರಿಯತೆಗೆ ಕಾರಣವಾಗಿದೆ.
ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.


Click it and Unblock the Notifications