Karnataka: ಟಾಟಾದಿಂದ ರಾಜ್ಯದಲ್ಲಿ ರೂ.2,300 ಕೋಟಿ ಬಂಡವಾಳ ಹೂಡಿಕೆ.. ಸಾವಿರಾರು ಜನರಿಗೆ ಉದ್ಯೋಗ
ಟಾಟಾ ಸಮೂಹ (Tata Group) ಮಾಲೀಕತ್ವದ ಏರ್ ಇಂಡಿಯಾ (Air India) ಮತ್ತು ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ (Tata Advanced Systems), ಕರ್ನಾಟಕದಲ್ಲಿ ರೂ.2,300 ಕೋಟಿ ಬಂಡವಾಳ ಹೂಡಲು ಮುಂದಾಗಿವೆ. ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ಬಗ್ಗೆ ಸಿಎಂ ಕರ್ನಾಟಕ (CM of Karnataka) 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ನೇತೃತ್ವದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರಗಳ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಟಾಟಾದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯಲ್ಲಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Bengaluru) ಹತ್ತಿರ ವಿಮಾನ ನಿರ್ವಹಣೆ ಮತ್ತು ದುರಸ್ತಿ ಘಟಕವನ್ನು ಸ್ಥಾಪಿಸಲು ರೂ.1,300 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದೆ. ಇದರಿಂದ ನೇರವಾಗಿ 1,200 ಜನರಿಗೆ ಕೆಲಸ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ದೊರೆಯಲಿವೆ.
ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕಂಪನಿಯು 3 ಯೋಜನೆಗಳಿಗೆ ರೂ.1,030 ಕೋಟಿ ಹಣವನ್ನು ಹೂಡಲಿದೆ. ರೂ.420 ಕೋಟಿಯನ್ನು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ ರೂ.310 ಕೋಟಿ ಬಂಡವಾಳವನ್ನು ಗನ್ ತಯಾರಿಕ ಘಟಕ (Gun Manufacturing Facility) ಮತ್ತು ರೂ.300 ಕೋಟಿ ವೆಚ್ಚದಲ್ಲಿ ವಿಮಾನಯಾನ, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದ್ದು, 450 ಉದ್ಯೋಗಗಳು ಸಿಗಲಿವೆ.

ಬೆಂಗಳೂರು ವಿಮಾನ ನಿಲ್ದಾಣ ಸಮೀಪ ಮತ್ತು ಕೋಲಾರದಲ್ಲಿ 'ಟಿಎಎಸ್ಎಲ್' ಗನ್ ತಯಾರಿಕ ಘಟಕವನ್ನು ಸ್ಥಾಪಿಸಲಿದೆ. ಆ ಮೂಲಕ ಕಂಪನಿಯು ತನಗೆ ಅಗತ್ಯವಿರುವ 13,000 ಬಿಡಿಭಾಗಗಳಲ್ಲಿ ಶೇಕಡ 50% ಅನ್ನು ಸ್ಥಳೀಯವಾಗಿ ಪಡೆಯುವ ಆಲೋಚನೆಯನ್ನು ಹೊಂದಿದ್ದು, 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2 ರಿಂದ 3 ಸಾವಿರ ಜನರಿಗೆ ಉದ್ಯೋಗ ಲಭ್ಯವಾಗಲಿದೆ.
ಬೆಂಗಳೂರಿನಲ್ಲಿ 1939ರಷ್ಟು ಹಿಂದೆಯೇ ಎಚ್ಎಎಲ್ (HAL) ಘಟಕವನ್ನು ಆರಂಭಿಸಲಾಗಿದ್ದು, ರಾಜ್ಯವು ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿ ಸಾಧಿಸಲು ನೆರವಾಗಿದೆ. ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಹಾಗೂ ಹೆಲಿಕಾಪ್ಟರ್ ಗಳ ಪೈಕಿ ಶೇಕಡ 67% ಕರ್ನಾಟಕದಲ್ಲಿಯೇ ತಯಾರಿಸಲಾಗುತ್ತಿದೆ. ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇಕಡ 65% ಕೊಡುಗೆ ನೀಡುತ್ತಿದೆ ಎಂಬುದು ಗಮನಾರ್ಹ ಅಂಶವಾಗಿದೆ.
ಟಾಟಾ ಸಮೂಹ ಮಾಲೀಕತ್ವದ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್, ರಾಜ್ಯದಲ್ಲಿ ರೂ.2,300 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಇದರಿಂದ ಖಂಡಿತವಾಗಿಯೂ ಉದ್ಯೋಗಗಳು ಸೃಷ್ಟಿಯಾಗಲಿದೆ. ಆದರೆ, ಹೆಚ್ಚಿನ ಸಂಖ್ಯೆಯ ಕೆಲಸಗಳನ್ನು ಕರ್ನಾಟಕ ಮೂಲದವರಿಗೆ ನೀಡಲಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications