Karnataka Budget Highlights: ಸಮುದ್ರ ಆಂಬುಲೆನ್ಸ್.. ಸರ್ಜಾಪುರದಿಂದ ಮೆಟ್ರೋ, ಇವಿ ಮಾಲೀಕರಿಗೆ ಸಿಹಿಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, ತಮ್ಮ ಬಜೆಟ್ ಭಾಷಣದಲ್ಲಿ ಮೂಲಸೌಕರ್ಯ ಕ್ಷೇತ್ರದ ಅಭಿವೃದ್ಧಿಗೆ ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ. ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್, ಬಿಎಂಟಿಸಿಗೆ 1334 ಹೊಸ ಎಲೆಕ್ಟ್ರಿಕ್ ಬಸ್ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಕರ್ನಾಟಕ ಬಜೆಟ್ (Karnataka Budget)ನ ಪ್ರಮುಖ ಹೈಲೈಟ್ಸ್ ಇಲ್ಲಿವೆ.
ಈ ಬಾರಿಗೆ ಬಜೆಟ್ನಲ್ಲಿ ಲೋಕೋಪಯೋಗಿ ಇಲಾಖೆಗೆ ಭರಪೂರ ಕೊಡುಗೆಯನ್ನು ನೀಡಿದ್ದಾರೆ. 'ಪ್ರಸಕ್ತ ಸಾಲಿನಲ್ಲಿ ಕೆಶಿಪ್-4 ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ವಿವಿಧ ಜಿಲ್ಲೆಗಳಲ್ಲಿ 875 ಕಿಲೋಮೀಟರ್ ಉದ್ದದ ರಾಜ್ಯ ಹೆದ್ದಾರಿಯನ್ನು ಬಾಹ್ಯ ಹಣಕಾಸು ಸಂಸ್ಥೆಯ ನೆರವಿನೊಂದಿಗೆ ರೂ.5,736 ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು' ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯನ್ನು ನಿವಾರಿಸಲು ರೂ.450 ಕೋಟಿ ವೆಚ್ಚದಲ್ಲಿ 4.50 ಕಿ.ಮೀ ಉದ್ದದ ಮೇಲ್ಸೇತುವೆ (Elevated Corridor) ಕಾಮಗಾರಿಯನ್ನು ಕೇಂದ್ರ ಸರ್ಕಾರ ಸಹಯೋಗದಲ್ಲಿ ಕೈಗೊಳ್ಳಲಾಗುವುದು. ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದ ಜಂಕ್ಷನ್ ನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.
ಮುಂಬೈ - ಚೆನ್ನೈ ಕೈಗಾರಿಕಾ ಕಾರಿಡಾರ್ ಮಾದರಿಯಂತೆ ರಾಜ್ಯ ಸರ್ಕಾರವು ಎರಡು ಆರ್ಥಿಕ ಕಾರಿಡಾರ್ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. 'ಬೆಂಗಳೂರಿಂದ ಮಂಗಳೂರು ಬಂದರಿನವರೆಗೆ ಒಂದು ಕಾರಿಡಾರ್, ಬೀದರ್ ಹಾಗೂ ಬೆಂಗಳೂರು ನಡುವೆ ಮತ್ತೊಂದು ಕಾರಿಡರ್ ಅಭಿವೃದ್ಧಿಪಡಿಸಲಾಗುವುದು. ಮಂಗಳೂರಿನ ಗುರುಪುರ ಮತ್ತು ನೇತ್ರಾವತಿ ನದಿಗಳಲ್ಲಿ ಜಲ ಮೆಟ್ರೋ (ವಾಟರ್ ಮೆಟ್ರೋ) ಸೇವೆಯನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾವುದು' ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಕರ್ನಾಟಕ ಬಜೆಟ್ನಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದು, ರೂ.3,000 ಕೋಟಿ ಅನುದಾನ ಮೀಸಲಿಡಲಾಗಿದೆ. 'ಸಮುದ್ರ ಮೀನುಗಾರಿಕೆಗೆ ಹೋಗುವ ಮೀನುಗಾರರು ಅಪಾಯವನ್ನು ಎದುರುಗೊಂಡಾಗ ಅವರ ಜೀವ ರಕ್ಷಣೆಗೆ ರೂ.7 ಕೋಟಿ ವೆಚ್ಚದಲ್ಲಿ ಸಮುದ್ರ ಆಂಬುಲೆನ್ಸ್ (Sea Ambulance) ಖರೀದಿಸಲಾಗುವುದು. ಕಾರವಾರ ಬಂದಿರಿನಲ್ಲಿ ಅಗ್ನಿ ನಿರೋಧಕ ಉಪಕರಣ ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲಾಗುವುದು' ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ರನ್-ವೇ ವಿಸ್ತರಣೆಗಾಗಿ ಭೂಸ್ವಾಧೀನ ಪ್ರಕ್ರಿಯೆಗಾಗಿ ರೂ.126 ಕೋಟಿ ನೀಡಲಾಗಿದ್ದು, ಪ್ರಸಕ್ತ ಸಾಲಿನ ಬಾಕಿಯಿರುವ ರೂ.43 ಬಿಡುಗಡೆಗೊಳಿಸಿ ಕಾಮಗಾರಿ ಆರಂಭಿಸಲಾಗುವುದು. ವಿಜಯಪುರದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೂ.94 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಹಾಗೂ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗೆ ಅನುದಾನ ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಈ ಬಜೆಟ್ನಲ್ಲಿ ಬೆಂಗಳೂರು ಅಭಿವೃದ್ಧಿಗೂ ಅಧಿಕ ಒತ್ತು ನೀಡಲಾಗಿದೆ. 'ನಮ್ಮ ಮೆಟ್ರೋ ಹಂತ-3ಎ ಅಡಿಯಲ್ಲಿ ಸರ್ಜಾಪುರದಿಂದ ಅಗರ, ಕೊರಮಂಗಲ, ಡೈರಿ ವೃತ್ತ, ಮೇಖ್ರಿ ವೃತ್ತ, ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗದ ನಿರ್ಮಾಣದ ಬಗ್ಗೆ ಡಿಪಿಆರ್ ಕರಡು ಸಿದ್ದಪಡಿಸಲಾಗಿದ್ದು ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ. ಮೆಟ್ರೋ ಯೋಜನೆ ಹಂತ -2, 2ಎ ಯೋಜನೆಯಡಿ ಹೊರವರ್ತುಲ ರಸ್ತೆ, ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಸಿದ್ಧವಾಗಲಿದೆ' ಎಂದು ತಿಳಿಸಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಪ್ರಯಾಣಿಕರ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್ ಬಸ್, 820 ಬಿಎಸ್-6 ಆಧಾರಿತ ಡೀಸೆಲ್ ಬಸ್ ಗಳನ್ನು ಸೇರ್ಪಡೆಗೊಳಿಸಲಾಗುವುದು. ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ವೆಹಿಕಲ್ ಟ್ರ್ಯಾಕಿಂಗ್ ಹೊಂದಿರುವ ಮೊಬೈಲ್ ಆಪ್ ಪರಿಚಯಿಸಲಾಗುವುದು ಜೊತೆಗೆ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ (ಎಲೆಕ್ಟ್ರಿಕ್) ಚಾಲಿತ ವಾಹನಗಳನ್ನು ಉತ್ತೇಜಿಸಲು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ. '2,500 ಇವಿ ಚಾರ್ಜಿಂಗ್ (EV Charging) ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ವಿದ್ಯುತ್ ಸರಬರಾಜು ಕಂಪನಿಗಳ ಮೂಲಕ ರೂ.35 ಕೋಟಿ ವೆಚ್ಚದಲ್ಲಿ 100 ಚಾರ್ಜಿಂಗ್ ಕೇಂದ್ರಗಳನ್ನು ತೆರಯಲಾಗವುದು' ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.


Click it and Unblock the Notifications








