Karnataka Budget: ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಭಾರೀ ಅನುದಾನ ಘೋಷಣೆ.. ಇನ್ನೂ ಏನೇನು ಸಿಕ್ತು?
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, ಹಣಕಾಸು ಸಚಿವರೂ ಆಗಿದ್ದು, 16ನೇ ಬಾರಿಗೆ ಬಜೆಟ್ನ್ನು ಯಶಸ್ವಿಯಾಗಿ ಮಂಡನೆ ಮಾಡಿದ್ದಾರೆ. ಈ ಬಜೆಟ್ (budget) ಗಾತ್ರ ಬರೋಬ್ಬರಿ ರೂ.4,09,549 ಕೋಟಿ ಇದ್ದು, ವಿವಿಧ ಕ್ಷೇತ್ರಗಳಿಗೆ ಭರಪೂರ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಭಾರೀ ಅನುದಾನವನ್ನು ಮೀಸಲಿಟ್ಟಿದ್ದಾರೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಅಂದಾಜು ಮೊತ್ತ ರೂ.40,000 ಕೋಟಿ ವೆಚ್ಚದಲ್ಲಿ ಉತ್ತರ - ದಕ್ಷಿಣ ಹಾಗೂ ಪೂರ್ವ - ಪಶ್ಚಿಮ ಸುರಂಗ (Tunnel) ಮಾರ್ಗದ ಕಾರಿಡಾರ್ಗಳನ್ನು ನಿರ್ಮಿಸಲು ಅನುಕೂಲವಾಗುವಂತೆ ರೂ.19,000 ಕೋಟಿ ಗ್ಯಾರಂಟಿಯನ್ನು ಸರ್ಕಾರದಿಂದ ಒದಗಿಸಲಾಗುತ್ತದೆ ಎಂದು ಮುಖ್ಯಮಂತಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಈ ಹಿಂದೆ, ಮೊದಲ ಹಂತವಾಗಿ ಒಟ್ಟು 40 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿದ್ದರು. ಅದರಲ್ಲಿ 18 ಕಿಲೋಮೀಟರ್ ಉದ್ದದ ಉತ್ತರ - ದಕ್ಷಿಣ ಸುರಂಗ ರಸ್ತೆ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ನ್ನು ಬೆಸೆಯುತ್ತದೆ. ಪೂರ್ವ - ಪಶ್ಚಿಮ ಸುರಂಗ ರಸ್ತೆ ಕೆ.ಆರ್ ಪುರಂನಿಂದ ಮೈಸೂರು ರಸ್ತೆಯನ್ನು ಸಂಪರ್ಕಿಸುತ್ತದೆ ಎಂದು ತಿಳಿದುಬಂದಿತ್ತು.
ನಗರದಲ್ಲಿ ವಾಹನ ದಟ್ಟಣೆ ಸಮಸ್ಯೆ ಬಹೆಗರಿಸಲು ಕೂಡ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಪ್ರಮುಖವಾಗಿ ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ ರೂ.8,916 ಕೋಟಿ ವೆಚ್ಚದಲ್ಲಿ 40.50 ಕಿಲೋಮೀಟರ್ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ರಸ್ತೆಯನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.

ಕಾಲುವೆಯ ಬಫರ್ ಪ್ರದೇಶವನ್ನು ಉಪಯೋಗ ಮಾಡಿಕೊಂಡು ರೂ.3,000 ಕೋಟಿ ವೆಚ್ಚದಲ್ಲಿ 300 ಕಿಲೋಮೀಟರ್ ಹೆಚ್ಚುವರಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಬಿಎಂಎಂಪಿ ವ್ಯಾಪ್ತಿಯ 460 ಕಿಲೋಮೀಟರ್ ಆರ್ಟಿರಿಯರ್ ಮತ್ತು ಸಬ್ ಆರ್ಟಿರಿಯರ್ ರಸ್ತೆಯನ್ನು ರೂ.660 ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ಬೆಂಗಳೂರು ನಗರದಲ್ಲಿ 120 ಕಿಲೋಮೀಟರ್ ಉದ್ದದ ಫ್ಲೈಪವರ್ ಹಾಗೂ ಗ್ರೇಡ್ ಸೆಪರೇಟರ್ಗಳನ್ನು ನಿರ್ಮಿಸಲಾಗುವುದು. ನೆನೆಗುದಿಗೆ ಬಿದ್ದಿದ್ದ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು 'ಬೆಂಗಳೂರು ಬಿಸ್ನೆಸ್ ಕಾರಿಡಾರ್' ಎಂದು ಮರುನಾಮಕರಣಗೊಳಿಸಿ, 73 ಕಿಲೋಮೀಟರ್ ಉದ್ದದ ರಸ್ತೆಯನ್ನು ನಿರ್ಮಿಸಲು ಹುಡ್ಕೋ ಬ್ಯಾಂಕ್ ನೆರವಿನೊಂದಿಗೆ ರೂ.27,000 ಕೋಟಿ ಮೊತ್ತದ ಯೋಜನೆಯನ್ನು ರೂಪಿಸಲಾಗಿದೆ. ಪ್ರತ್ಯೇಕ ತಂಡಗಳನ್ನು ರಚಿಸಿ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
'ನಮ್ಮ ಮೆಟ್ರೋ' ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತದೆ. ಸದ್ಯ 68 ನಿಲ್ದಾಣಗಳನ್ನು ಒಳಗೊಂಡಂತೆ 79.65 ಕಿಲೋಮೀಟರ್ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿಲೋಮೀಟರ್ ಹೆಚ್ಚಿವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಜೊತೆಗೆ ಮೆಟ್ರೋ ಜಾಲವನ್ನು ದೇವನಹಳ್ಳಿವರೆಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ರೂ.15,767 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಈ ಯೋಜನೆಯು 58 ರೈಲ್ವೆ ನಿಲ್ದಾಣಗಳು ಹಾಗೂ 148 ಕಿಲೋಮೀಟರ್ ಉದ್ದದ ರೈಲ್ವೆ ಜಾಲವನ್ನು ಹೊಂದಿರುತ್ತದೆ. ಇದು ನಾಲ್ಕು ಕಾರಿಡಾರ್ಗಳನ್ನು ಒಳಗೊಂಡಿದೆ. ಈ ಯೋಜನೆಯ ಎರಡು ಕಾರಿಡಾರ್ಗಳ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನುಳಿದ ಎರಡು ಕಾರಿಡಾರ್ಗಳ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಈ ಯೋಜನೆಯನ್ನು ಅನುಷ್ಠಾನಗೊಳಿಸುವುದು' ಎಂದು ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಮಾಹಿತಿ ನೀಡಿದ್ದಾರೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications