ಹೊಸ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಯಲ್ಲಿ ಮೊದಲ ಅಪಘಾತ ವರದಿ: ಟೂ ವೀಲರ್ಗಳಿಗೆ ಬ್ಯಾನ್!
ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯಲು ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೆಲವೇ ದಿನಗಳ ಹಿಂದೆ, ರಾಜ್ಯದ ವ್ಯಾಪ್ತಿಯಲ್ಲಿ ಹಾದುಹೋಗುವ ಈ ಹೆದ್ದಾರಿಯನ್ನು ಅನಧಿಕೃತವಾಗಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಭಾನುವಾರ ತಡರಾತ್ರಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಬಳಿಕ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಎಚ್ಚೆತ್ತುಕೊಂಡಿದ್ದು, ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದೆ.
ಈ ಬಗ್ಗೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಎನ್ಎಚ್ಎಐ ಅಧಿಕಾರಿಯೊಬ್ಬರು, 'ಎಕ್ಸ್ಪ್ರೆಸ್ವೇ ಪ್ರವೇಶ ಹಾಗೂ ನಿರ್ಗಮ ಸ್ಥಳಗಳಲ್ಲಿ ಬೈಕ್ಗಳು ಸೇರಿದಂತೆ ಎಲ್ಲ ವಿಧವಾದ ದ್ವಿಚಕ್ರ ವಾಹನಗಳ ಪ್ರವೇಶವನ್ನು ತಡೆಯಲು ಸೂಚಿಸಲಾಗಿದೆ. ಜೊತೆಗೆ ದ್ವಿಚಕ್ರ ವಾಹನಗಳನ್ನು ನಿಷೇಧ ಮಾಡಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ನಾಮಫಲಕವನ್ನು ಅಳವಡಿಕೆ ಮಾಡುವಂತೆಯೂ ನಿರ್ದೇಶನ ನೀಡಲಾಗಿದೆ' ಎಂದು ಹೇಳಿದ್ದಾರೆ.

'ಬೈಕ್ವೊಂದು ಇನ್ನೋವಾ ಕಾರಿಗೆ ಡಿಕ್ಕಿಯಾದ ಪರಿಣಾಮ ನೂತನ ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ ಸಂಭವಿಸಿತ್ತು. ಸಾಮಾನ್ಯವಾಗಿ ಎಕ್ಸ್ಪ್ರೆಸ್ವೇಗಳನ್ನು ವಾಹನಗಳು 120 ಕೆಎಂಪಿಹೆಚ್ ವೇಗದಲ್ಲಿ ಸಂಚರಿಸುವಂತೆ ಅಭಿವೃದ್ಧಿಪಡಿಸಲಾಗಿರುತ್ತದೆ. ಕಾರು ಸೇರಿದಂತೆ ದೊಡ್ಡ ವಾಹನಗಳು ಗರಿಷ್ಠ ವೇಗದಲ್ಲಿ ಹೋಗುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಈ ರಸ್ತೆಗಳು ಅಷ್ಟಾಗಿ ಸುರಕ್ಷಿತವಲ್ಲ. ಅವರು ತಮ್ಮ ಜೀವಕ್ಕೂ ಆಪತ್ತು ತಂದುಕೊಳ್ಳುವುದು ಮಾತ್ರವಲ್ಲದೆ, ಇತರರನ್ನು ಅಪಾಯಕ್ಕೆ ದೂಡುತ್ತಾರೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ (Bengaluru-Chennai Expressway) ವಿಶೇಷತೆಗಳೇನು: ಈ ನೂತನ ಹೆದ್ದಾರಿ 262 ಕಿ.ಮೀ ಉದ್ದವಿದೆ. ಕರ್ನಾಟಕದಲ್ಲಿ ಬಹುತೇಕ ಎಲ್ಲ ಕಾಮಗಾರಿ ಪೂರ್ಣಗೊಂಡಿದೆ. ಹೊಸ ಎಕ್ಸ್ಪ್ರೆಸ್ವೇ ರಾಜ್ಯದಲ್ಲಿ 71 ಕಿಲೋಮೀಟರ್ ಹಾದುಹೋಗಲಿದ್ದು, ಹೊಸಕೋಟೆ ಮತ್ತು ಕೆಜಿಎಫ್ (ಬೇತಮಂಗಲ) ಮಧ್ಯೆಯಿರುವ 68 ಕಿ.ಮೀ ಉದ್ದದ ರಸ್ತೆಯನ್ನು ವಾಹನ ಸವಾರರು ಉಪಯೋಗ ಮಾಡುತ್ತಿದ್ದಾರೆ. ಉಳಿದ 3 ಕಿ.ಮೀ ಹೆದ್ದಾರಿಯ ಕಾಮಗಾರಿ ಇದೇ ವರ್ಷಾಂತ್ಯದೊಳಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.

ಈ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಕರ್ನಾಟಕ ಮಾತ್ರವಲ್ಲದೆ, ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಿಗೂ ಸಂಪರ್ಕ ಕೊಂಡಿಯಾಗಿದೆ. ಅಲ್ಲಿ ಸಾಕಷ್ಟು ಕಾಮಕಾರಿ ಬಾಕಿಯಿದ್ದು, ಪೂರ್ಣಗೊಳ್ಳಲು ಒಂದಷ್ಟು ಕಾಲಾವಕಾಶ ಕೂಡ ಬೇಕಾಗುತ್ತದೆ ಎಂದು ತಿಳಿದುಬಂದಿದೆ. ಸದ್ಯ, ನೂತನ ಹೆದ್ದಾರಿ 4 ಪಥಗಳನ್ನು ಒಳಗೊಂಡಿದೆ. ವಾಹನಗಳ ದಟ್ಟಣೆ ಅಧಿಕಗೊಂಡರೆ, 8 ಪಥಗಳಿಗೆ ವಿಸ್ತರಣೆ ಮಾಡಬಹುದು.
ಹೊಸ ಎಕ್ಸ್ಪ್ರೆಸ್ವೇಯನ್ನು ರೂ.17,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದು ಕರ್ನಾಟಕದ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ಆಂಧ್ರ ಪ್ರದೇಶದ ಚಿತ್ತೂರು, ತಮಿಳುನಾಡಿನ ರಾಣಿಪೇಟೆ ಹಾಗೂ ಶ್ರೀಪೆರಂಬದೂರುಗಳಲ್ಲಿ ಹಾದುಹೋಗುತ್ತದೆ. ಈ ಹೆದ್ದಾರಿ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಂಡ ಮೇಲೆ ಪ್ರಯಾಣದ ಅವಧಿಯೂ 2 ರಿಂದ 3 ಗಂಟೆಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ನೂತನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ 17 ಮೇಲ್ಸೇತುವೆಗಳು ಮತ್ತು 41 ಕೆಳ ಸೇತುವೆಗಳನ್ನು ಒಳಗೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಆರಂಭಿಕ ಬಿಂದು ಹೊಂದಿದ್ದು, ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಕೊನೆಗೊಳ್ಳಲಿದೆ. ಈ ಹೆದ್ದಾರಿ ನಿರ್ಮಾಣದಿಂದ ಎರಡು ರಾಜ್ಯಗಳ ನಡುವೆ ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರಗಳು ಅಭಿವೃದ್ಧಿ ಹೊಂದಲಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications