ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರ್- ಸ್ಥಳದಲ್ಲೇ ಐವರು ದುರ್ಮರಣ
ಅಪಘಾತ ಹಿನ್ನೆಲೆ ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ನಿಯಂತ್ರಣ ತಪ್ಪಿದ ಮಾರುತಿ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತ ಹಿನ್ನೆಲೆ ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ನಿಯಂತ್ರಣ ತಪ್ಪಿದ ಮಾರುತಿ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ದುರಂತ ನಡೆದಿದ್ದು, ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಮೃತರನ್ನು ವಿಜಯಪುರ ಜಿಲ್ಲೆಯ ಜಮನಾಳ ಗ್ರಾಮದ ಆಕಾಶ್(13), ಸೌಮ್ಯ(13), ಸುವರ್ಣ(65), ಪ್ರಭು(55), ರುದ್ರಪ್ಪ(70) ಎಂದು ಗುರುತಿಸಲಾಗಿದ್ದು, ದಾನಪ್ಪ ವೃದ್ರಪ್ಪ ಕೋರಿ, ರಾಜು ಗೋಪಾಲಗೌಡ ಪಾಟೀಲ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ವಿಜಯಪುರ ಜಿಲ್ಲೆಯ ಜಮನಾಳ ಗ್ರಾಮದಿಂದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದಾಗ ಈ ಅವಘಡ ಸಂಭವಿಸಿದ್ದು, ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.

ರಸ್ತೆ ಬದಿ ನಿಂತಿದ್ದ ಲಾರಿ ಸಂಖ್ಯೆ ಕೆಎ30, 7636 ಎಂದು ಗುರುತಿಸಲಾಗಿದ್ದು, ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ಘಟನೆ ಸಂಬಂಧಿಸಿ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಂಕೋಲ ಸರ್ಕಾರಿ ಆಸ್ಪತ್ರೆಯಿಂದ ಕಾರವಾರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


Click it and Unblock the Notifications








