ಬಜೆಟ್ 2022: ಪ್ರಸಕ್ತ ವರ್ಷದಲ್ಲಿ ನಿರ್ಮಾಣವಾಗಲಿದೆ 25 ಸಾವಿರ ಕಿ.ಮೀ ಹೊಸ ರಾಷ್ಟ್ರೀಯ ಹೆದ್ದಾರಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನವ ಭಾರತ ನಿರ್ಮಾಣಕ್ಕೆ 2022ರ ಕೇಂದ್ರ ಬಜೆಟ್ನಲ್ಲಿ ಹಲವಾರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದು, ರಾಷ್ಟ್ರೀಯ ಹೆದ್ದಾರಿ ಹೆಚ್ಚಿಸಲು ಮಹತ್ವದ ಯೋಜನೆ ರೂಪಿಸಲಾಗಿದೆ.

2022-23ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದ್ದು, ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರವು ಮೊದಲಿನಿಂದಲೂ ಹೆಚ್ಚು ಉತ್ಸುಕವಾಗಿದೆ. ದೇಶದ ಆರ್ಥಿಕತೆಯ ಅಭಿವೃದ್ದಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಇದೇ ಕಾರಣಕ್ಕೆ ಸಾರಿಗೆ ಸಂಪರ್ಕವನ್ನು ಬಲಪಡಿಸಲು ವಿಶ್ವದ ಪ್ರಮುಖ ರಾಷ್ಟ್ರಗಳು ಹೆದ್ದಾರಿಗಳ ನಿರ್ಮಾಣದ ಮೇಲೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿವೆ.

ಅತ್ಯುತ್ತಮ ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಸಾರಿಗೆ ಸಂಪರ್ಕವನ್ನು ಸರಳಗೊಳಿಸಿ ಆರ್ಥಿಕತೆಗೆ ಉತ್ತೇಜನ ನೀಡಲಾಗುತ್ತಿದ್ದು, ಸ್ವತಂತ್ರ ಭಾರತದ ನಂತರ ಅಂತಾರಾಜ್ಯಗಳ ಸಂಪರ್ಕಕ್ಕಾಗಿ ಹಲವಾರು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಾಣ ಮಾಡಲಾಯ್ತು.

ಇತ್ತೀಚೆಗೆ ಕಳೆದ ಒಂದು ದಶಕ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ನಿರ್ವಹಣೆಯಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಈ ಮೂಲಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುತ್ತಿದ್ದು, ಸಾರಿಗೆ ಸಂಪರ್ಕದಲ್ಲಿ ಹೊಸ ಕ್ರಾಂತಿಗೆ ಕಾರಣವಾಗುತ್ತಿದೆ.

ಕೇಂದ್ರ ಸರ್ಕಾರವು ಸದ್ಯ ಹೊಸ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವುದರ ಜೊತೆಗೆ ಅಸ್ತಿತ್ವದಲ್ಲಿರುವ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಉತ್ಸುಕವಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವಲ್ಲಿ ದಿಟ್ಟ ಹೆಜ್ಜೆಯನ್ನಿಡುತ್ತಿದೆ.

ಭಾರತದಲ್ಲಿ ವಿವಿಧ ಹೆದ್ದಾರಿಗಳ ಒಟ್ಟು ಅಂತರವು 1.40 ಲಕ್ಷ ಕಿ.ಮೀ ಗಳಾಗಿದ್ದು, 2025ರ ವೇಳೆಗೆ ಎಲ್ಲಾ ಹೆದ್ದಾರಿಗಳ ಒಟ್ಟು ಅಂತರವನ್ನು 2 ಲಕ್ಷ ಕಿ.ಮೀ ಹೆಚ್ಚಿಸುವ ಗುರಿಹೊಂದಲಾಗಿದೆ. ಇದಕ್ಕಾಗಿ ವಾರ್ಷಿಕ ಬಜೆಟ್ನಲ್ಲಿ ಹೆಚ್ಚಿನ ಹಣ ವಿನಿಯೋಗಿಸಲಾಗುತ್ತಿದ್ದು, 2022-23ನೇ ಸಾಲಿನ ಬಜೆಟ್ನಲ್ಲಿ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.

ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಅಲ್ಲಿನ ರಾಷ್ಟ್ರೀಯ ಹೆದ್ದಾರಿಗಳ ಪಾತ್ರ ಪ್ರಮುಖವಾಗಿರುತ್ತದೆ. ಸರಕು ವಾಹನಗಳ ತ್ವರಿತ ಚಾಲನೆಗೆ ಹೆದ್ದಾರಿಗಳು ನೆರವಾಗುತ್ತವೆ. ಈ ಕಾರಣಕ್ಕೆ ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವ ಬಗ್ಗೆ ಕೇಂದ್ರ ಸರ್ಕಾರವು ದಿಟ್ಟ ಹೆಜ್ಜೆಯನ್ನಿಡುತ್ತಿದೆ.

ಕೇಂದ್ರ ಸರ್ಕಾರವು ಹೆದ್ದಾರಿ ನಿರ್ಮಾಣ ಕಾರ್ಯಗಳನ್ನು ವೇಗಗೊಳಿಸುವುದರ ಜೊತೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅಪಘಾತಗಳನ್ನು ಕಡಿಮೆಗೊಳಿಸಲು ಸಹ ಪ್ರಯತ್ನಿಸುತ್ತಿದ್ದು, ಟೋಲ್ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆಯೊಂದಿಗೆ ವಾಹನಗಳ ಚಾಲನೆಯನ್ನು ವೇಗಗೊಳಿಸಲಾಗಿದೆ.

ಜೊತೆಗೆ ಭಾರತದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಗಳನ್ನು ಅಮೆರಿಕದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ ಸಮಾನಾಂತರವಾಗಿರುವ ಅಭಿವೃದ್ದಿಗೊಳಿಸುತ್ತಿರುವುದಾಗಿ ಮಾಹಿತಿ ನೀಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಮಾಹಿತಿ ನೀಡಿದ್ದರು.

ಕೇಂದ್ರ ಸರ್ಕಾರವು 2025ರ ವೇಳೆಗೆ ದೇಶಾದ್ಯಂತ 2 ಲಕ್ಷ ಕಿ.ಮೀ ರಾಷ್ಟ್ರೀಯ ಹೆದ್ದಾರಿ ಜಾಲವನ್ನು ಅಭಿವೃದ್ಧಿಪಡಿಸಲು ಕಾರ್ಯ ಪ್ರವೃತ್ತವಾಗಿದ್ದು, ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಕಾರಗೊಳಿಸಲು ಮೂಲಸೌಕರ್ಯ ಅಭಿವೃದ್ಧಿಯು ಅವಶ್ಯವಾಗಿದೆ ಎಂದು ನಿತಿನ್ ಗಡ್ಕರಿ ಮಾತನಾಡಿದ್ದರು.

ರಾಷ್ಟ್ರೀಯ ಹೆದ್ದಾರಿ ಜಾಲವನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು 22 ಗ್ರೀನ್ ಫೀಲ್ಡ್ ಪ್ರವೇಶ ನಿಯಂತ್ರಣ ಎಕ್ಸ್ ಪ್ರೆಸ್ ವೇಗಳನ್ನು ಸಿದ್ಧಪಡಿಸುತ್ತಿರುವುದಾಗಿ ಮಾಹಿತಿ ನೀಡಿರುವ ಸಚಿವ ನಿತಿನ್ ಗಡ್ಕರಿಯವರು ಫಾಸ್ಟ್ ಟ್ರ್ಯಾಕ್ ಹೆದ್ದಾರಿಗಳು ವಲಯದ ಆರ್ಥಿಕ ಅಭಿವೃದ್ಧಿಗೆ ಸಹಾಯ ಮಾಡಲಿದೆ ಎಂದಿದ್ದಾರೆ.

ಕೇಂದ್ರ ಸಾರಿಗೆ ಇಲಾಖೆಯು ಹೊಸ ಹೊಸ ಹೆದ್ದಾರಿಗಳನ್ನು ಹಾಗೂ ಎಕ್ಸ್ಪ್ರೆಸ್ವೇಗಳನ್ನು ನಿರ್ಮಿಸುವ ಮೂಲಕ ಪ್ರಮುಖ ನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುತ್ತಿದೆ. ನಮ್ಮ ಕರ್ನಾಟಕದಲ್ಲಿಯೂ ಸಹ ಬೆಂಗಳೂರು - ಮೈಸೂರು ನಡುವಿನ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಈ ಹೆದ್ದಾರಿ ಸಂಚಾರಕ್ಕೆ ತೆರೆದುಕೊಂಡ ನಂತರ ಈ ಎರಡು ನಗರಗಳ ನಡುವಿನ ಸಂಚಾರ ಅವಧಿಯು 90 ನಿಮಿಷಗಳಿಗೆ ಇಳಿಯಲಿದೆ.

ಈಗ ಇರುವ ಹೆದ್ದಾರಿಯಲ್ಲಿ ಈ ಎರಡು ನಗರಗಳ ನಡುವೆ ಸಂಚರಿಸಲು ಸುಮಾರು 3 ಗಂಟೆ ಬೇಕಾಗುತ್ತದೆ. ಈ ಹೆದ್ದಾರಿಯು ಆ ವರ್ಷಾಂತ್ಯಕ್ಕೆ ಸಾರ್ವಜನಿಕರ ಬಳಕೆಗೆ ತೆರೆದು ಕೊಳ್ಳಲಿದ್ದು, ಹೆದ್ದಾರಿ ಶುಲ್ಕ ಸಂಗ್ರಹವು ಸಹ ಕೇಂದ್ರ ಸರ್ಕಾರದ ಆದಾಯದಲ್ಲಿ ಮಹತ್ವದ ಕೊಡುಗೆ ನೀಡುತ್ತಿದೆ.


Click it and Unblock the Notifications








