Vande Bharat Express: ಬೆಂಗಳೂರು-ಮಂಗಳೂರು ನಡುವೆ ಶೀಘ್ರ ಸಂಚಾರ, ಕರಾವಳಿ ಜನರ ಕನಸು ಸಾಕಾರ!
ಕರ್ನಾಟಕದಲ್ಲಿ ಶೀಘ್ರದಲ್ಲಿಯೇ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ಸಂಚರಿಸಲಿದೆ. ಇದು, ಬೆಂಗಳೂರು - ಮಂಗಳೂರು - ಗೋವಾ ನಡುವೆ ಕಾರ್ಯಾಚರಣೆ ನಡೆಸಲಿದೆ. ಈ ಕುರಿತು ಸ್ವತಃ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.
ದೇಶಾದ್ಯಂತ ಕೇಂದ್ರ ಸರ್ಕಾರ 'ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ' ಯೋಜನೆಯಡಿ 508 ರೈಲು ನಿಲ್ದಾಣಗಳನ್ನು ಮೇಲ್ದರ್ಜೆರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು, ವರ್ಚುವಲ್ ಮೂಲಕ ಭಾನುವಾರ ಚಾಲನೆ ನೀಡಿದ್ದರು. ಆ ವೇಳೆ, ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ.

ಮಂಗಳೂರು - ಬೆಂಗಳೂರು ಮಧ್ಯೆ 90 ಕಿಲೋಮೀಟರ್ ಉದ್ದದ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಮುಗಿದ ನಂತರ, ವಂದೇ ಭಾರತ್ ಎಕ್ಸ್ಪ್ರೆಸ್ ಓಡಾಟದ ನಡೆಸಲಿದೆ. ಇದರೊಟ್ಟಿಗೆ ಮಂಗಳೂರು - ಗೋವಾ ನಡುವೆಯು ಈ ರೈಲು ಸಂಚರಿಸಲು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮತಿ ಕೊಟ್ಟಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಕಾಸರಗೋಡು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಮನವಿ ಮಾಡಲಾಗಿದೆ. ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ರೂ.19.32 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದು. ಬಂಟ್ವಾಳ ರೈಲು ನಿಲ್ದಾಣಕ್ಕೆ ರೂ.26.18 ಕೋಟಿ, ಸುಬ್ರಹ್ಮಣ್ಯ ರೈಲು ನಿಲ್ದಾಣಕ್ಕೆ ರೂ.23.73 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆ ಅನುದಾನದಲ್ಲಿ ಆರು ಮೀಟರ್ ಅಗಲದ ಪಾದಚಾರಿ ಮೇಲ್ಸೇತುವೆ, ಹೊಸದಾದ ಹವಾನಿಯಂತ್ರಿತ ವಿಶ್ರಾಂತಿ ಕೊಠಡಿ, ನೂತನ ಪಾರ್ಸೆಲ್ ಕಚೇರಿ, ದ್ವಿಚಕ್ರ ಮತ್ತು ಕಾರುಗಳನ್ನು ನಿಲ್ಲಿಸಲು ಸುಸರ್ಜಿತ ಪಾರ್ಕಿಂಗ್ ವ್ಯವಸ್ಥೆ ಹಾಗೂ ರೈಲು ನಿಲ್ದಾಣಗಳ ಕಟ್ಟಡ ಅಭಿವೃದ್ಧಿಯನ್ನು ಮಾಡಲಾಗುತ್ತದೆ. ಈ ಮೂಲಕ ಪ್ರತಿಯೊಂದು ರೈಲು ನಿಲ್ದಾಣಗಳನ್ನು ಅತ್ಯಾಧುನಿಕವಾಗಿ ಮೇಲ್ದರ್ಜೆರಿಸಲಾಗುತ್ತದೆ.
ಸದ್ಯ, ಬೆಂಗಳೂರು - ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಬೆಂಗಳೂರಿಂದ ರಾತ್ರಿ 9 ಗಂಟೆಗೆ ಸಂಚಾರವನ್ನು ಆರಂಭಿಸಿ, ಮರುದಿನ ಬೆಳಗ್ಗೆ 8.13ಕ್ಕೆ ಮಂಗಳೂರು ಜಂಕ್ಷನ್ ತಲುಪುತ್ತದೆ. ಪ್ರಯಾಣದ ಅವಧಿಯು 10 ಗಂಟೆಗೂ ಹೆಚ್ಚಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರಾತ್ರಿ 9.35ಕ್ಕೆ ಹೊರಡುವ ಕಣ್ಣೂರ್ ಎಕ್ಸ್ಪ್ರೆಸ್, ಮರುದಿನ ಮುಂಜಾನೆ 7.10ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪುತ್ತದೆ.
ಬೆಂಗಳೂರು - ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರ ಆರಂಭಿಸಿದರೆ, ಈ ಪ್ರಯಾಣದ ಅವಧಿಯು ಒಂದೆರಡು ಗಂಟೆಗಳು ಕಡಿಮೆಯಾಗಲಿದೆ. ಕರ್ನಾಟಕವು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಓಡಾಟ ನಡೆಸುವ ವಂದೇ ಭಾರತ್ ರೈಲುಗಳು ಅತ್ಯಾಧುನಿಕ ಸೌಲಭ್ಯವನ್ನು ಹೊಂದಿವೆ. ಇವುಗಳಲ್ಲಿ ಪ್ರತ್ಯೇಕ ಎಂಜಿನ್ ಇಲ್ಲ. ಸಂಪೂರ್ಣ ಹವಾನಿಯಂತ್ರಿತವಾದ ಈ ರೈಲಿನ ಸೀಟುಗಳು ಆರಾಮದಾಯವಾಗಿದ್ದು, ಜೈವಿಕ ಶೌಚಾಲಯದ ವ್ಯವಸ್ಥೆಯಿದೆ.
ಇನ್ನು, ಬೆಂಗಳೂರು ಹೈದರಾಬಾದ್ ನಡುವೆಯು ಕೆಲವೇ ದಿನಗಳಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಕಾರ್ಯಚರಣೆ ನಡೆಸಲಿದ್ದು, ಅದರ ಪರೀಕ್ಷಾರ್ಥ ಸಂಚಾರ ನಡೆಯುತ್ತಿದೆ. ಈಗಾಗಲೇ ರಾಜ್ಯದಲ್ಲಿ ಮೈಸೂರು - ಬೆಂಗಳೂರು - ಚೆನ್ನೈ ಹಾಗೂ ಬೆಂಗಳೂರು - ಧಾರವಾಡ ಮಾರ್ಗವಾಗಿ ವಂದೇ ಭಾರತ್ ರೈಲುಗಳು ಸಂಚರಿಸುತ್ತಿದ್ದು, ಶೀಘ್ರದಲ್ಲೇ ಬೆಂಗಳೂರು - ಮಂಗಳೂರು ರೈಲು ಹೊಸ ಸೇರ್ಪಡೆಯಾಗಲಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications