ಉತ್ತರ ಕರ್ನಾಟಕ ಜನರಿಗೆ ಸಿಹಿಸುದ್ದಿ: ಶೀಘ್ರ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ.. ವಿಶೇಷತೆಗಳೇನು?
ಉತ್ತರ ಕರ್ನಾಟಕ (North Karnataka) ಭಾಗದ ಜನರಿಗೆ ಶೀಘ್ರದಲ್ಲೇ ದೊಡ್ಡ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ. ಬಹುದಿನಗಳ ಕನಸು ನನಸಾಗಲಿದ್ದು, ವಿಜಯಪುರ ವಿಮಾನ ನಿಲ್ದಾಣ (Vijayapura Airport), ಈ ವರ್ಷ (2024)ದೊಳಗೆ ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶುಕ್ರವಾರ ತಮ್ಮ ಬಜೆಟ್ ಭಾಷಣದಲ್ಲಿ ರೂ.350 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಮುಕ್ತಾಯದ ಹಂತದಲಿದ್ದು, ಶೀಘ್ರವೇ ಕಾರ್ಯಚರಣೆ ಪ್ರಾರಂಭವಾಗಲಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಗೆ ರೂ.94 ಕೋಟಿ ಬಿಡುಗಡೆ ಮಾಡಲಾಗಿದೆ' ಎಂದು ತಿಳಿಸಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣ (Vijayapura Airport)ವನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿರ್ಮಾಣ ಮಾಡುತ್ತಿದೆ. ಏರ್ಪೋರ್ಟ್ ನಗರದಿಂದ 15 ಕಿ.ಮೀ ದೂರದಲ್ಲಿರುವ ಮದಭಾವಿಯಲ್ಲಿದೆ. ವಿಶಾಲವಾದ 727 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ನಡೆಯುತ್ತಿದ್ದು, ಶೇಕಡ 80% ಕೆಲಸಗಳು ಪೂರ್ಣಗೊಂಡಿವೆ ಎಂದು ವರದಿಯಾಗಿದೆ.
ಈ ವಿಮಾನ ನಿಲ್ದಾಣಕ್ಕೆ 12ನೇ ಶತಮಾನದ ಸಮಾಜ ಸುಧಾರಕ, ಸಾಂಸ್ಕೃತಿಕ ನಾಯಕ, ವಿಶ್ವ ಗುರು ಬಸವಣ್ಣ (Basavanna) ಅವರ ಹೆಸರಿಡಬಹುದು ಎನ್ನಲಾಗಿದೆ. ಬಸವಣ್ಣ ಮೂಲತಃ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯವರು. ಈ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣವು ಸುಸಜ್ಜಿತ ಪ್ರಯಾಣಿಕರ ಟರ್ಮಿನಲ್ ಕಟ್ಟಡ ಹೊಂದಿರಲಿದೆ ಎಂದು ಹೇಳಲಾಗಿದೆ.
ವಿಜಯಪುರ ವಿಮಾನ ನಿಲ್ದಾಣ 1.9 ಕಿ.ಮೀ ಉದ್ದದ ರನ್ವೇಯನ್ನು ಒಳಗೊಂಡಿರಲಿದ್ದು, ಏರ್ಬಸ್ 320 ಮಾದರಿಯ ವಿಮಾನಗಳನ್ನು ಇಳಿಸಬಹುದು ಎನ್ನಲಾಗಿದೆ. ಈ ಹಿಂದೆ, ವಿಜಯಪುರ ವಿಮಾನ ನಿಲ್ದಾಣವು ಫೆಬ್ರವರಿ 2024ರೊಳಗೆ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ ಕೊಂಚ ತಡವಾಗಿದ್ದು, ಶೀಘ್ರದಲ್ಲಿಯೇ ವಿಮಾನ ನಿಲ್ದಾಣ ಉದ್ಘಾಟನೆಗೊಳ್ಳುವ ನೀರಿಕ್ಷೆಯಿದೆ.
ಹಾಸನ ವಿಮಾನ ನಿಲ್ದಾಣ (Hassan Airport) ಕಾಮಗಾರಿಯು ನಡೆಯುತ್ತಿದ್ದು, ನಗರದ ಬೂವನಹಳ್ಳಿಯಲ್ಲಿ ಸಮೀಪ 536 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಹಾಸನ ವಿಮಾನ ನಿಲ್ದಾಣಕ್ಕಾಗಿ 2023-24ನೇ ಸಾಲಿನಲ್ಲಿ ರೂ.55 ಕೋಟಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬಾಕಿಯಿರುವ ರೂ.30 ಕೋಟಿ ಬಿಡುಗಡೆಗೊಳಿಸಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ರೂ.220 ಕೋಟಿ ವೆಚ್ಚದ ರಾಯಚೂರು ವಿಮಾನ ನಿಲ್ದಾಣ (Raichur Airport)ದ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು. ಮೈಸೂರು ವಿಮಾನ ನಿಲ್ದಾಣ (Mysore Airport)ದಲ್ಲಿ ರನ್-ವೇ ವಿಸ್ತರಣೆಗೆ ಭೂಸ್ವಾಧೀನ ಪ್ರಕ್ರಿಯೆಗಾಗಿ ರೂ.126 ಕೋಟಿ ನೀಡಲಾಗಿದ್ದು, ಪ್ರಸಕ್ತ ಸಾಲಿನ ಬಾಕಿಯಿರುವ ರೂ.43 ಬಿಡುಗಡೆಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಕಳೆದ ವರ್ಷ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿತ್ತು. ಸೋಗಾನೆ ಗ್ರಾಮದ 662.38 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ವಿಮಾನ ನಿಲ್ದಾಣವು ಶಿವಮೊಗ್ಗ ನಗರದಿಂದ 8.8 ಕಿಲೋಮೀಟರ್ ದೂರವಿದ್ದು, ಭದ್ರಾವತಿಯಿಂದ ಸುಮಾರು 8.2 ಕಿಲೋಮೀಟರ್ ಅಂತರದಲ್ಲಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಅತಿ ಉದ್ದದ ರನ್ ವೇಯನ್ನು ಹೊಂದಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications